
ಬಾಗೇಪಲ್ಲಿ: ರಸ್ತೆ ಅಪಘಾತಗಳಲ್ಲಿ ಸಂಭವಿಸಬಹುದಾದ ಪ್ರಾಣ ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಇದೇ 12ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂಬ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಈ ಹಿನ್ನೆಲೆಯಲ್ಲಿ ಇಲ್ಲಿನ ಮುಖ್ಯರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡಿ, ಸಂಚಾರ ನಿಯಮ ಉಲ್ಲಂಘಿದವರನ್ನು ಪೊಲೀಸರು ತಡೆದು ಎಚ್ಚರಿಕೆ ಕೊಟ್ಟು ಕಳುಹಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಸಬ್ ಇನ್ಸ್ಪೆಕ್ಟರ್ ಸುನೀಲ್, ‘ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ಅಮೂಲ್ಯವಾದ ಜೀವ ಮತ್ತು ಜೀವನ ಎರಡೂ ಉಳಿಯಲಿದೆ. ಪ್ರಾಣಾಪಾಯಗಳು ತಪ್ಪುತ್ತವೆ’ ಎಂದರು.
ಸರ್ಕಲ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ, ಸಬ್ ಇನ್ಸ್ಪೆಕ್ಟರ್ ಸುನೀಲ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಕೆ.ಶ್ರೀನಿವಾಸ್, ಆನಂದ್ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮಧುಸೂದನ್, ಗೃಹರಕ್ಷಕ ದಳದದ ಕೃಷ್ಣಪ್ಪ ವಾಹನ ಸವಾರರಲ್ಲಿ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿದರು. ಪಟ್ಟಣದ ಮುಖ್ಯರಸ್ತೆಯ ತಾಲ್ಲೂಕು ಕಚೇರಿಯ ಮುಂದೆ ಹೆಲ್ಮೆಟ್ ಧರಿಸದ ಹಾಗೂ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಸೇರಿದಂತೆ ಇನ್ನಿತರ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರನ್ನು ತಡೆದ ಪೊಲೀಸರು, ಅವರ ವಾಹನಗಳನ್ನು ವಶಕ್ಕೆ ಪಡೆದರು.
ಪ್ರತಿಯೊಬ್ಬರಿಗೆ ₹500 ದಂಡ ವಿಧಿಸಿ, ವಾಹನಗಳನ್ನು ಬಿಟ್ಟು ಕಳುಹಿಸಿದರು.
‘ಡಿ. 12ರಂದು ಹೆಲ್ಮೆಟ್ ಧರಿಸುವ ಬಗ್ಗೆ ಪ್ರಚಾರ ಮಾಡಿ, ಕಡ್ಡಾಯ ಮಾಡಲಾಗುವುದು. ನಂತರ ಹೆಲ್ಮೆಟ್ ಧರಿಸದ ಹಾಗೂ ಸಂಚಾರಿ ನಿಯಮಗಳು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಸರ್ಕಲ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.