
ಚಿಕ್ಕಬಳ್ಳಾಪುರ: ಸಂವಿಧಾನವೇ ಮಾನವ ಹಕ್ಕುಗಳ ಜೀವಂತ ಗ್ರಂಥ. ಮಾನವ ಹಕ್ಕುಗಳ ಉಲ್ಲಂಘನೆ ಸಲ್ಲದು ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗುಡಿಬಂಡೆಯ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಗಂಡು ಎಂಬ ತಾರತಮ್ಯಗಳಿಲ್ಲದೆ ಪ್ರತಿಯೊಬ್ಬ ಮನುಷ್ಯನಿಗೂ ಅನೇಕ ಹಕ್ಕುಗಳಿವೆ. ಯಾರ ಹಕ್ಕುಗಳಿಗೂ ಯಾರೊಬ್ಬರೂ ಧಕ್ಕೆ ತರುವಂತಿಲ್ಲ. ಉಲ್ಲಂಘಿಸುವಂತಿಲ್ಲ. ಮಾನವ ಹಕ್ಕುಗಳ ಸಂರಕ್ಷಣೆ ಕೇವಲ ಸರ್ಕಾರಗಳ ಕರ್ತವ್ಯ, ಹೊಣೆಗಾರಿಕೆ ಮಾತ್ರವಲ್ಲ. ಬದಲಿಗೆ ಸಮಾಜದಲ್ಲಿ ಜೀವಿಸುವ ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿ.
ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948 ರಲ್ಲಿ ವಿಶ್ವ ಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಪ್ರತಿವರ್ಷ ಡಿ.10 ರ ದಿನವನ್ನು ವಿಶ್ವ ಮಾನವ ಹಕ್ಕುಗಳ ದಿನವನ್ನಾಗಿ ಇಡೀ ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಭಾರತದ ಸಂವಿಧಾನದಲ್ಲಿ ಮಾನವ ಹಕ್ಕುಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಒಂದು ರೀತಿಯಲ್ಲಿ ಭಾರತ ಸಂವಿಧಾನವೇ ಮಾನವ ಹಕ್ಕುಗಳ ಜೀವಂತ ಗ್ರಂಥ ಎಂದರೆ ಅತಿಶಯೋಕ್ತಿಯಲ್ಲ ಎಂದು ಹೇಳಿದರು.
ಜಾತಿ, ಧರ್ಮಗಳ ಆಧಾರದ ಮೇಲೆ ತಾರತಮ್ಯ ಮಾಡುವುದು, ಮಾನವ ಕಳ್ಳಸಾಗಣಿಕೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇವೆಲ್ಲವನ್ನೂ ತಡೆಯುವಲ್ಲಿ ಸರ್ಕಾರ, ನ್ಯಾಯಾಂಗದ ಜೊತೆಗೆ ಪ್ರತಿಯೊಬ್ಬ ನಾಗರೀಕರೂ ಕೈಜೋಡಿಸಬೇಕು. ದ್ವೇಷದ ಬದಲು ಪ್ರೀತಿಯಿಂದ ಕಾಣುವ ದೃಷ್ಟಿ ಹೊಂದುವ ಮೂಲಕ ಎಲ್ಲರನ್ನೂ ಗೌರವದಿಂದ ಕಾಣುವಂತಾದಾಗ ಮಾನವ ಹಕ್ಕುಗಳು ಉಲ್ಲಂಘನೆಗೆ ಅವಕಾಶವಿರುವುದಿಲ್ಲ ಎಂದು ಸಲಹೆ ನೀಡಿದರು.
ವಿದ್ಯಾರ್ಥಿ ಯುವಜನರು ಮಾನವ ಹಕ್ಕುಗಳ ಪಾಲನೆಗೆ ಕಟಿಬದ್ಧರಾಗಬೇಕು. ಅನ್ಯಾಯವನ್ನು ಕಂಡ ಕೂಡಲೇ ಪ್ರಶ್ನೆ ಮಾಡಲು ಮುಂದಾಗಬೇಕು.ಮೌನಕ್ಕೆ ಶರಣಾಗದೆ ಸಕ್ಷಮ ಪ್ರಾಧಿಕಾರಗಳಿಗೆ ದೂರು ನೀಡಬೇಕು ಎಂದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಒಬ್ಬ ವ್ಯಕ್ತಿ ತಾನು ಸಮಾಜದಲ್ಲಿ ಹೇಗೆ ಬದುಕಬೇಕು ಎಂದು ಬಯಸುತ್ತಾನೆಯೋ ಹಾಗೆಯೇ ಇತರೆ ವ್ಯಕ್ತಿಗಳು ಬದುಕಬೇಕೆಂದು ಬಯಸಬೇಕು. ಅದೇ ನಿಜವಾದ ಮಾನವೀಯತೆ. ಮಾನವೀಯತೆ ಮೂಲಕ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯ ಎಂದರು.
ಪ್ರತಿಯೊಬ್ಬರ ಹಕ್ಕುಗಳನ್ನೂ ಗೌರವಿಸುವುದೇ ಮುಖ್ಯ. ಬಸ್ಸಿನಲ್ಲಿ ವಿಕಲಚೇತನರಿಗೆ ಮೀಸಲಿಟ್ಟ ಆಸನವನ್ನು ಬಿಟ್ಟುಕೊಡುವುದೂ ಮಾನವ ಹಕ್ಕುಗಳ ಪಾಲನೆಯೇ ಆಗಿರುತ್ತದೆ. ದೇಹದ ಬಣ್ಣದ ಆಧಾರದ ಮೇಲೆ ಪ್ರತ್ಯೇಕಿಸಿ ನೋಡುವುದು ಕೂಡಾ ಮಾನವ ಹಕ್ಕುಗಳ ಉಲ್ಲಂಘನೆಯೇ ಆಗುತ್ತದೆ ಎಂದರು.
ಬಿ.ಆರ್.ಅಂಬೇಡ್ಕರ್ ಅವರು ಈ ದೇಶದಲ್ಲಿ ಪ್ರತಿಯೊಬ್ಬರೂ ಗೌರವಯುತವಾಗಿ, ಸಮಾನತೆಯಿಂದ ಬದುಕಲು ಬೇಕಾದ ಎಲ್ಲವನ್ನೂ ಸಂವಿಧಾನದಲ್ಲಿ ಕಟ್ಟಿಕೊಟ್ಟಿದ್ದಾರೆ. ಸಂವಿಧಾನದ ಆಶಯಗಳನ್ನು ಪಾಲಿಸುವುದೇ ನಿಜವಾದ ಮಾನವ ಹಕ್ಕುಗಳ ರಕ್ಷಣೆ ಎಂದರು.
ಉನ್ನತಿ ಮಾನವ ಹಕ್ಕುಗಳ ಸಂರಕ್ಷಣಾ ಸಂಘದ ಅಧ್ಯಕ್ಷ, ವಕೀಲ ವಿಶ್ವನಾಥ್, ಶಿಕ್ಷಣ, ಬದುಕು, ಆರೋಗ್ಯ, ಉದ್ಯೋಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮಾನವ ಹಕ್ಕುಗಳಿವೆ. ಜಗತ್ತಿನ ಎಲ್ಲಾ ರಾಷ್ಟ್ರಗಳ ಮತ್ತು ಜನರ ಸಾಧನೆಗಳ ಸಾಮಾನ್ಯ ಮಾನದಂಡವಾಗಿ ಮಾನವ ಹಕ್ಕುಗಳಿವೆ. ಮಾನವ ಹಕ್ಕುಗಳು ಮೂಲಭೂತ ಹಕ್ಕುಗಳನ್ನು ಖಚಿತಪಡಿಸುತ್ತವೆ. ಮಾನವ ಹಕ್ಕುಗಳ ಪರಿಧಿ ಹೆಚ್ಚು ವಿಸ್ತಾರವಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗದ ಹೊರತಂದಿರುವ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತೀಕ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ರಮೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿಗಳ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.