ಗುಡಿಬಂಡೆ: ‘ಕೋವಿಡ್ ಹಿನ್ನೆಲೆಯಲ್ಲಿ ಕಳೆದ 18 ತಿಂಗಳಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸ್ಮಾರ್ಟ್ ಕ್ಲಾಸ್ ಅನುಷ್ಠಾನಗೊಳಿಸಿ ಟ್ಯಾಬ್ ವಿತರಣೆ ಮಾಡುತ್ತಿದೆ’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಲಸಿಕೆ ಹಾಕಲು ಕಾಲೇಜಿನಲ್ಲಿ ವ್ಯವಸ್ಥೆ ಮಾಡಬೇಕು. ಲಸಿಕೆ ಪಡೆದ ನಂತರ ಪಾಠ ಪ್ರಾರಂಭಿಸಬೇಕು. ಕಾಲೇಜಿನ ಯಾವುದೇ ಸಮಸ್ಯೆಯಾದರೂ ಬಗೆಹರಿಸಲು ಸಿದ್ಧ. ವಿದ್ಯಾರ್ಥಿಗಳು ಯಾವುದೇ ಸಂಕೋಚ ಇಲ್ಲದೆ ತಿಳಿಸಬೇಕು ಎಂದು ಹೇಳಿದರು.
ಈಗಾಗಲೇ ಕಾಲೇಜು ಕೊಠಡಿಗಳ ನಿರ್ಮಾಣಕ್ಕಾಗಿ ₹ 1 ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕಾಲೇಜು ಆರಂಭವಾಗಿ 25 ವರ್ಷಗಳಾಗಿದ್ದು ಕಾಂಪೌಂಡ್ ಕೊರತೆ ಇದೆ. ಈ ಸಂಬಂಧ ₹ 90 ಲಕ್ಷ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಕಾಂಪೌಂಡ್ ಕಾಮಗಾರಿ ಆರಂಭವಾಗಲಿದೆ ಎಂದರು.
ಸರ್ಕಾರಿ ಕಾಲೇಜಿಗೆ ಗ್ರಾಮೀಣ ಬಡ ವಿದ್ಯಾರ್ಥಿಗಳು ಹೆಚ್ಚಾಗಿ ವ್ಯಾಸಂಗಕ್ಕೆ ಬರುತ್ತಿದ್ದಾರೆ. 2014-15ನೇ ಸಾಲಿನಲ್ಲಿ ಪ್ರಭಾರ ಪ್ರಾಂಶುಪಾಲರು ವಿದ್ಯಾರ್ಥಿಗಳು ಕಟ್ಟಿದ್ದ ಶುಲ್ಕದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದರು. ಇದರಿಂದ ಅಂತಿಮ ವರ್ಷದ ನೂರಾರು ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ತಡೆಹಿಡಿಯಲಾಗಿದೆ. ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತುಕತೆ ನಡೆಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಗಿದೆ ಎಂದು ಸೂಚಿಸಿದರು.
ತಹಶೀಲ್ದಾರ್ ಸಿಗ್ಬತುಲ್ಲಾ, ಪ್ರಭಾರ ಪ್ರಾಂಶುಪಾಲ ವಿ. ಕೃಷ್ಣಪ್ಪ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿಜಯಲಕ್ಷ್ಮಿ, ಪ್ರಾಧ್ಯಾಪಕರಾದ ವೆಂಕಟರಾಮ, ಜಿ.ಎನ್. ರಘು, ಅತಿಥಿ ಉಪನ್ಯಾಸಕ ಭರತ್, ಮುಖಂಡರಾದ ಅಮರನಾಥ, ಅಂಬರೀಶ, ಪಟ್ಟಣ ಪಂಚಾಯಿತಿ ಸದಸ್ಯ ವಿಕಾಸ, ಬಾಗೇಪಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.