ADVERTISEMENT

ಶಿಡ್ಲಘಟ್ಟ: ಗುಂಡುತೋಪುಗಳಲ್ಲಿ ಗಿಡ ನಾಟಿ ಮಾಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 3:14 IST
Last Updated 30 ಮಾರ್ಚ್ 2021, 3:14 IST
ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಗುಂಡುತೋಪುಗಳಲ್ಲಿ ಗಿಡ ನಾಟಿ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಗುಂಡುತೋಪುಗಳಲ್ಲಿ ಗಿಡ ನಾಟಿ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಶಿಡ್ಲಘಟ್ಟ: ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಹಳ್ಳಿಗಳಲ್ಲಿರುವ ಗುಂಡುತೋಪುಗಳಲ್ಲಿ ಗಿಡ ನಾಟಿ ಮಾಡಬೇಕು ಹಾಗೂ ಅವುಗಳ ನಿರ್ವಹಣೆಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.

‘ತಾಲ್ಲೂಕಿನಾದ್ಯಂತ ಗುಂಡುತೋಪುಗಳು ಬಲಾಢ್ಯರ ಒತ್ತುವರಿಯಲ್ಲಿದೆ. ಇಂತಹ ಜಾಗಗಳಲ್ಲಿ ದನದ ಶೆಡ್‌ಗಳು ಸೇರಿದಂತೆ ಮನೆಗಳನ್ನು ನಿರ್ಮಿಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಂದ ಅನುಮತಿ ನೀಡಿರುವುದಷ್ಟೇ ಅಲ್ಲದೇ ನರೇಗಾ ಯೋಜನೆಯಡಿ ಹಣವನ್ನು ಸಹ ನೀಡಿರುವುದು ದುರದೃಷ್ಟಕರ ಸಂಗತಿ. ಹಾಗಾಗಿ ಕೂಡಲೇ ಒತ್ತುವರಿಯಾಗಿರುವಂತಹ ಗುಂಡುತೋಪು ಜಾಗಗಳನ್ನು ತೆರವುಗೊಳಿಸುವುದು ಸೇರಿದಂತೆ ಕರ್ನಾಟಕ ಸರ್ಕಾರದ ಹಸಿರು ಯೋಜನೆ ಕಾರ್ಯಕ್ರಮದಡಿ ಗಿಡ ನೆಡುವ ಜೊತೆಗೆ ಗ್ರಾಮ ಪಂಚಾಯಿತಿಗಳಿಂದ ನಿರ್ವಹಣೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳಲ್ಲಿಯೂ ಹಣ್ಣಿನ ಗಿಡಗಳನ್ನು ನಾಟಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ದ ಪದಾಧಿಕಾರಿಗಳು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇಓ ಅವರಿಗೆ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪರ ಮೂಲಕ ಮನವಿ ಪತ್ರ ಸಲ್ಲಿಸಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ದ ಜಿಲ್ಲಾ ಉಪಾಧ್ಯಕ್ಷ ಟಿ.ಕೆ.ಅರುಣ್‌ಕುಮಾರ್, ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಉಪಾಧ್ಯಕ್ಷ ಶಂಕರನಾರಾಯಣ, ಪದಾಧಿಕಾರಿಗಳಾದ ಶ್ರೀನಿವಾಸ್, ಜಿ.ಎನ್.ನಾಗೇಶ್, ಎಂ.ನಾರಾಯಣಸ್ವಾಮಿ, ಕೋಟೆ ಚನ್ನೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.