ADVERTISEMENT

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ವಿಶೇಷ ಅನುದಾನ, ನಗರೋತ್ಥಾನ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ಲತಾ ತಾಕೀತು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 3:52 IST
Last Updated 19 ಡಿಸೆಂಬರ್ 2020, 3:52 IST
ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು   

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ಲತಾ ಸೂಚಿಸಿದ್ದಾರೆ.

ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಜಿಲ್ಲಾಡಳಿತ ಸಂಕಲ್ಪ ತೊಟ್ಟಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಅನುದಾನ ಹಾಗೂ ನಗರೋತ್ಥಾನ 3ನೇ ಹಂತದ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ನಗರೋತ್ಥಾನ 3ನೇ ಹಂತದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ನಗರೋತ್ಥಾನ 3ನೇ ಹಂತ ಯೋಜನೆಗಳಡಿ ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇವುಗಳನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಗರದ ಕೆಲವು ಕಡೆ ಯುಜಿಡಿ ಬ್ಲಾಕ್ ಆಗುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ದಿಸೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು. ಸಮಸ್ಯೆಯನ್ನು ಆದ್ಯತೆ ಮೆರೆಗೆ ಬಗೆಹರಿಸಬೇಕು’ ಎಂದು ಸೂಚಿಸಿದರು.

ನಗರದಲ್ಲಿ ಕೆಲವು ಕಡೆ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಅಲ್ಲಲ್ಲಿ ನೀರು ನಿಂತುಕೊಳ್ಳುತ್ತಿದ್ದು, ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಗುತ್ತಿಗೆದಾರರಿಗೆ ಈ ಬಗ್ಗೆ ಮಾರ್ಗದರ್ಶನ ನೀಡುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಪ್ರಸ್ತುತ ಬಿಬಿ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಗಳಲ್ಲಿ ಬೀದಿ ದೀಪಗಳು, ಗಿಡ ನೆಡುವುದು, ಪಾರ್ಕಿಂಗ್ ಎಲ್ಲವನ್ನೂ ಕ್ರಮ ಬದ್ಧವಾಗಿ ಮಾಡಬೇಕು. ನಗರದಲ್ಲಿ ಜಕ್ಕಲಮಡುಗು ಕುಡಿಯುವ ನೀರು ಸರಬರಾಜು ಬಗ್ಗೆ ದೂರುಗಳು ಬರುತ್ತಿದ್ದು, ಪ್ರತಿ ನಿತ್ಯವೂ ನೀರು ಸರಬರಾಜು ಮಾಡಬೇಕು. ನಗರದಲ್ಲಿ ಅಗತ್ಯವಿರುವ ಕಡೆ ಶೌಚಾಲಯಗಳ ನಿರ್ಮಾಣಕ್ಕೆ ಜಾಗ ಗುರುತಿಸಿ ಕ್ರಿಯಾಯೋಜನೆ ಕಚೇರಿಗೆ ಸಲ್ಲಿಸುವಂತೆ ಪೌರಾಯುಕ್ತ ಲೋಹಿತ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಣುಕಾ ಹಾಗೂ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.