ADVERTISEMENT

ಎಲ್ಲ ಕ್ಷೇತ್ರದಲ್ಲಿ ಮಹಿಳೆಯ ಛಾಪು

ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ರೈತ ವಿಜ್ಞಾನಿಗಳ ಜತೆ ಸಂವಾದ; ಜಿಲ್ಲಾಧಿಕಾರಿ ಅಭಿಮತ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 3:13 IST
Last Updated 9 ಮಾರ್ಚ್ 2021, 3:13 IST
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಾಧಕಿಯರನ್ನು ಜಿಲ್ಲಾಧಿಕಾರಿ ಆರ್. ಲತಾ ಸನ್ಮಾನಿಸಿದರು
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಾಧಕಿಯರನ್ನು ಜಿಲ್ಲಾಧಿಕಾರಿ ಆರ್. ಲತಾ ಸನ್ಮಾನಿಸಿದರು   

ಚಿಕ್ಕಬಳ್ಳಾಪುರ: ಮಹಿಳೆಯರು ಇಂದಿನ ದಿನಗಳಲ್ಲಿ ಒಂದೇ ಕ್ಷೇತ್ರಕ್ಕೆ ಸೀಮಿತವಾಗದೆ ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಕೊಡುಗೆ ಸ್ಮರಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

ನಗರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ರೈತ ವಿಜ್ಞಾನಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ಮಹಿಳೆ ಸಬಲಳಾಗಿದ್ದಾಳೆ. ಪ್ರಮುಖ ಹುದ್ದೆಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ರಾರಾಜಿಸುತ್ತಿದ್ದಾಳೆ. ಮಹಿಳೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾಳೆ. ಒಳಮನೆ ಮಾತ್ರವೇ ಅಲ್ಲ ಹೊರಜಗತ್ತಿನ ಅರಿವೂ ಆಗಿದೆ. ಯಾರನ್ನು ಹೇಗೆ ಎಲ್ಲಿ ನಿಭಾಯಿಸಬೇಕು ಎಂಬ ‌ಕಲೆಯೂ ಕರಗತವಾಗಿದೆ ಎಂದು ಹೇಳಿದರು.

ADVERTISEMENT

ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತಾಳ್ಮೆ ಮತ್ತು ಚಾಕಚಕ್ಯತೆ ಆಕೆಯ ರಕ್ತದಲ್ಲೇ ಇದೆ. ಅದಕ್ಕೀಗ ವೇದಿಕೆ ದೊರಕುತ್ತಿದೆ. ಆದರೆ ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿ, ತಾಯಿ, ಅಕ್ಕ, ತಂಗಿಯರ ಪರಿಶ್ರಮಕ್ಕೂ ಪ್ರಶಂಸೆ ದೊರೆಯಬೇಕು‌ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್. ರೂಪಾ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಬೈರಪ್ಪ, ಚಿಂತಾಮಣಿ ಕೃಷಿ ವಿಜ್ಞಾನ ಕೇಂದ್ರದ ಗಾಯತ್ರಿ, ಕೃಷಿ ಇಲಾಖೆಯ ಅಧಿಕಾರಿಗಳಾದ ಚಂದ್ರಕುಮಾರ್, ಎಡಿಎ ಕೇಶವರೆಡ್ಡಿ, ಪ್ರಗತಿಪರ ರೈತ ಮಹಿಳೆ ರೇಣುಕಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.