ಚಿಕ್ಕಬಳ್ಳಾಪುರ: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿರುವ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನೆ ಸಲ್ಲಿಸಲು ಮತ್ತು ಮುಂದಿನ ಚುನಾವಣೆಗಳಿಗೆ ಕಾರ್ಯಕರ್ತರನ್ನು ಹುರಿದುಂಬಿಸಲು ಇದೇ 13ರಂದು ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜನಸೇವಕ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಆಯೋಜಿಸಿದ್ದ ಜನಸೇವಕ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬಲವನ್ನು ವೃದ್ಧಿಸಿರುವ ಗ್ರಾಮ ಪಂಚಾಯಿತಿ ಸದಸ್ಯರು ಜನಸೇವಕರಾಗಿದ್ದಾರೆ. ಸಮಾವೇಶ ನಡೆಸುವ ಮೂಲಕ ಅವರಿಗೆ ಗೌರವಿಸಲಾಗುವುದು. ಅಲ್ಲದೇ ಪಕ್ಷವನ್ನು ಬೇರುಮಟ್ಟದಲ್ಲಿ ಇನ್ನಷ್ಟು ಬಲಗೊಳಿಸಿ ಸಂದೇಶ ರವಾನಿಸಲು ಸಮಾವೇಶವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಐದು ತಂಡಗಳನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಚಿಸಿದ್ದಾರೆ’ ಎಂದು ಹೇಳಿದರು.
‘ರಾಜ್ಯದ ಒಟ್ಟು 5,670 ಗ್ರಾಮ ಪಂಚಾಯಿತಿಗಳ 86,183 ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 45,246 (ಶೇಕಡ 52.04) ಬಿಜೆಪಿ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಪರಿಶಿಷ್ಟ ಪಂಗಡದ ಬಿಜೆಪಿ ಮುಖಂಡರು ಗೆಲುವು ಸಾಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಆ ನಿಟ್ಟಿನಲ್ಲಿ ಕಾರ್ಯ ಯೋಜನೆ ಮಾಡಬೇಕು’ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೇಶವ ಪ್ರಸಾದ್, ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಜನಸೇವಕ ಸಮಾವೇಶದ ಸಂಚಾಲಕ ನವೀನ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಜಿಲ್ಲಾ ಉಸ್ತುವಾರಿ ಕೃಷ್ಣರೆಡ್ಡಿ, ಮುರಳೀಧರ್, ಆವಲಗುರ್ಕಿ ಶ್ರೀನಿವಾಸ್ ರೆಡ್ಡಿ, ಮರಳಕುಂಟೆ ಕೃಷ್ಣ ಮೂರ್ತಿ, ರಮೇಶ್ ಬಾಯರಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.