ADVERTISEMENT

ಬಿಜೆಪಿಯ ಆಮಿಷಕ್ಕೆ ಬಲಿಯಾಗದಿರಿ

ಮಂಡಿಕಲ್ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ ಪ್ರಚಾರ ಸಭೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 5:46 IST
Last Updated 26 ನವೆಂಬರ್ 2019, 5:46 IST
ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎನ್‌.ರಾಧಾಕೃಷ್ಣ ಮಾತನಾಡಿದರು.
ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎನ್‌.ರಾಧಾಕೃಷ್ಣ ಮಾತನಾಡಿದರು.   

ಚಿಕ್ಕಬಳ್ಳಾಪುರ: ರೈತರು, ಕೂಲಿ ಕಾರ್ಮಿಕರು, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಜೆಡಿಎಸ್ ಪಕ್ಷವನ್ನು ಜನತೆ ಬೆಂಬಲಿಸಬೇಕು. ಮತವನ್ನು ಮದ್ಯ, ಹಣ, ಉಡುಗೊರೆ ನೀಡುವ ಸುಧಾಕರ್‌ಗೆ ಮತ ಹಾಕಬೇಡಿ ಎಂದು ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ ಮನವಿ ಮಾಡಿದರು.

ತಾಲೂಕಿನ ಮಂಡಿಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮವಾರ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಐದು ವರ್ಷಗಳಿಗೊಮ್ಮೆ ನಡೆಯುವ ವಿಧಾನಸಭೆ ಚುನಾವಣೆ ಎರಡು ವರ್ಷದಲ್ಲಿ ಮತ್ತೆ ಯಾಕೆ ಚುನಾವಣೆ ಬರುತ್ತಿದೆ ಎಂಬುದನ್ನು ಕ್ಷೇತ್ರದ ಮತದಾರರು ಆಲೋಚಿಸಬೇಕಿದೆ’ ಎಂದು ಹೇಳಿದರು.

ADVERTISEMENT

ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಜನಪರ ಕಾರ್ಯಕ್ರಮಗಳು, ರೈತರ 35 ಸಾವಿರ ಕೋಟಿ ಸಾಲ ಮನ್ನಾದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ₹ 800 ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ಐದು ಸಾವಿರಕ್ಕೂ ಹೆಚ್ಚು ರೈತ ಕುಟುಂಬಗಳು ಸಾಲದಿಂದ ಮುಕ್ತಿ ಪಡೆದಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸುಭದ್ರ ಮೈತ್ರಿ ಸರ್ಕಾರವನ್ನು ಉರುಳಿಸಿದ ಸುಧಾಕರ್ ಅವರ ರಾಜೀನಾಮೆಯಿಂದ ಕ್ಷೇತ್ರದಲ್ಲಿ ಅಕಾಲಿಕ ಉಪಚುನಾವಣೆ ಎದುರಾಗಿದ್ದು, ಜನರ ತೆರಿಗೆ ಹಣ ಪೋಲಾಗಿದೆ ಎಂದು ಆರೋಪಿಸಿದರು.

ಕುಮಾರಸ್ವಾಮಿ ಅವಧಿಯಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಎಲ್ಲ ವರ್ಗದ ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಜಿಲ್ಲೆಗೂ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅವರ ಕೈ ಬಲಪಡಿಸಲು ಯಾವುದೇ ಆಸೆ–ಆಮಿಷಗಳಿಗೆ ಮರುಳಾಗದೆ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಬೇಕೆಂದು ಎಂದು ಮನವಿ ಮಾಡಿದರು.

ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ , ‘ಅಧಿಕಾರ, ಹಣ ಆಸೆಗೆ ಡಾ.ಕೆ.ಸುಧಾಕರ್ ಬಲಿಯಾಗಿದ್ದಾರೆ. ಇಂತಹ ವ್ಯಕ್ತಿಯನ್ನು ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಭ್ರಷ್ಟಾರಹಿತ ಹಾಗೂ ಜನಸ್ನೇಹಿ ಆಡಳಿತ ನೀಡುವ ದೃಷ್ಟಿಯೊಂದಿಗೆ ಚುನಾವಣಾ ಕಣಕ್ಕೆ ಇಳಿದಿರುವ ಜೆಡಿಎಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ವಕೀಲ ಮಟಮಪ್ಪ, ರಾಜಣ್ಣ, ಪ್ರಭಾಕರ್, ಶ್ರೀನಿವಾಸ್, ಆರೂರು ಮಂಜಣ್ಣ, ಬಿ.ವಿ.ಶ್ರೀನಿವಾಸ್, ಮಂಚನಬೆಲೆ ಅಪ್ಪಣ್ಣ, ಬನ್ನಿಕುಪ್ಪೆ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.