ಶಿಡ್ಲಘಟ್ಟ: ರಾಜಕೀಯದಲ್ಲಿ ಹಣ ಮಾಡುವ ಉದ್ದೇಶ ನನ್ನದಲ್ಲ. ಜೆಡಿಎಸ್ ಕಾರ್ಯಕರ್ತರೇ ನನ್ನ ಸಂಪಾದನೆ, ಬೆನ್ನೆಲುಬು. ಜನರಿಗೆ ಒಳ್ಳೆಯದು ಮಾಡಬೇಕು. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಇತಿಹಾಸ ನಿರ್ಮಿಸುವುದು ನನ್ನ ಗುರಿ ಎಂದು ಜೆಡಿಎಸ್ ಮುಖಂಡ ಮೇಲೂರು ಬಿ.ಎನ್. ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಯರ್ರಹಳ್ಳಿ ಗ್ರಾಮದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವಾರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಜನಪರ ಕೆಲಸಗಳು ಮಾಡಲು ಸಾಧ್ಯವಾಗುವುದು ಗ್ರಾಮ ಪಂಚಾಯಿತಿ ಮೂಲಕವೇ. ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಲೇಬೇಕಾದ ಸಂದರ್ಭವಿದು. ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಲ್ಲಾ 30 ಗ್ರಾಮ ಪಂಚಾಯಿತಿಗಳನ್ನು ಜೆಡಿಎಸ್ ಪರವಾಗಿರುವಂತೆ ನೋಡಿಕೊಳ್ಳಿ. ಆಗಷ್ಟೇ ಕ್ಷೇತ್ರದ ಜನರಿಗೆ ಅನುಕೂಲ ಮಾಡಬಹುದು ಮತ್ತು ಗ್ರಾಮಗಳ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಕಾರಣಾಂತರಗಳಿಂದ ಮುಖಂಡ ರವಿಕುಮಾರ್ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಅಧಿಕಾರಕ್ಕೆ ತರಲು ಮತ್ತು ಪಕ್ಷ ಬಲಪಡಿಸಲು ಶ್ರಮಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿನ ಅನೇಕ ತೊಂದರೆ, ಅಸಹಕಾರ, ಭ್ರಷ್ಟಾಚಾರಕ್ಕೆ ಬೇಸತ್ತು ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಂಜುನಾಥ್ ಅವರೊಂದಿಗೆ ಹಲವಾರು ಮಂದಿ ಜೆಡಿಎಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಮುಖಂಡ ಗಂಜಿಗುಂಟೆ ಮೂರ್ತಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಬಶೆಟ್ಟಹಳ್ಳಿ ವೆಂಕಟೇಶ್, ಚೀಮನಹಳ್ಳಿ ಗೋಪಾಲ್, ತಾದೂರು ರಘು, ಪೂಲಕುಂಟಹಳ್ಳಿ ರಘುನಾಥರೆಡ್ಡಿ, ಲಕ್ಷ್ಮೀನಾರಾಯಣರೆಡ್ಡಿ, ನಾರಾಯಣಸ್ವಾಮಿ, ಶಿವಕುಮಾರ್ ಭಾವರೆಡ್ಡಿ, ಶ್ರೀರಾಮರೆಡ್ಡಿ, ವಿಜಯಭಾವರೆಡ್ಡಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.