ಚಿಕ್ಕಬಳ್ಳಾಪುರ: ‘ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ಹಳ್ಳಿ ಮತ್ತು ಗ್ರಾಮಗಳ ಮನೆ-ಮನೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನದ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂತರ್ ಸಮನ್ವಯ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಸೆಪ್ಟಂಬರ್ 5 ರಿಂದ 23ರ ವರೆಗೆ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಕರ ತಂಡಗಳು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಶಂಕಿತ ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಹಚ್ಚಲಿದ್ದಾರೆ. ತಜ್ಞ ವೈದ್ಯರಿಂದ ದೃಢಪಟ್ಟ ಪ್ರಕರಣಗಳಲ್ಲಿ ರೋಗಿಗಳಿಗೆ ಉಚಿತವಾಗಿ ಔಷಧ, ಚಿಕಿತ್ಸೆಯನ್ನು ನೀಡಲಾಗುತ್ತದೆ’ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್ ಗೌಡ, ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಅಧಿಕಾರಿ ಡಾ.ಚಂದ್ರಮೋಹನ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಚನ್ನಕೇಶವ ರೆಡ್ಡಿ, ಜಿಲ್ಲಾ ಐಡಿಎಸ್ಪಿ ಅಧಿಕಾರಿ ಡಾ. ಬಾಬು ರೆಡ್ಡಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಲಕ್ಷ್ಮೀದೇವಮ್ಮ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.