ಚಿಕ್ಕಬಳ್ಳಾಪುರ: ಕನ್ನಡ, ನಾಡು, ನುಡಿ, ಸಂಸ್ಕೃತಿ ಕುರಿತಾಗಿ ಎಲೆ ಮರೆಯ ಕಾಯಿಯಂತೆ ಕೆಲಸ ಮಾಡುತ್ತಿರುವವರನ್ನು ಗುರುತಿಸುವ ಕೆಲಸ ಆಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಶೋಭಾ ಹೇಳಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶನಿವಾರ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಸೈನ್ಸಸ್ ಅಂಡ್ ರೀಸರ್ಚ್ ಇನ್ಸ್ಟಿಟ್ಯೂಟ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆಯ ‘ಸಾಂಸ್ಕೃತಿಕ ಕನ್ನಡ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡವೆಂದರೆ ಕೇವಲ ಭಾಷೆಯಲ್ಲ. ನಮ್ಮ ಆಚಾರ, ವಿಚಾರ, ಸಂಸ್ಕೃತಿ, ಸಾಮಾಜಿಕ ನಡವಳಿಕೆ, ಧಾರ್ಮಿಕ ಸಾಮರಸ್ಯ, ಪರಿಸರ ಸಂರಕ್ಷಣೆ, ಸ್ವಚ್ಛತೆ ಎಲ್ಲವನ್ನೂ ಒಳಗೊಳ್ಳುತ್ತದೆ. ನಾಡುಕಟ್ಟುವ ಕೆಲಸ ಸಾಂಘಿಕವಾದದ್ದು ಎಂದು ಹೇಳಿದರು.
ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಸೈನ್ಸಸ್ ಅಂಡ್ ರೀಸರ್ಚ್ ಇನ್ಸ್ಟಿಟ್ಯೂಟ್ ಅಧ್ಯಕ್ಷ ಮಂಚನಬಲೆ ಎಂ.ಶ್ರೀನಿವಾಸ್ ಮಾತನಾಡಿ, ಕಲಾವಿದರನ್ನು ಗುರುತಿಸುವುದು, ಗೌರವಿಸುವುದು ಮತ್ತು ಕಲೆಗೆ ಪ್ರೋತ್ಸಾಹ ಮತ್ತು ವೇದಿಕೆ ಕಲ್ಪಿಸುವ ಕೆಲಸದಿಂದ ಮಾತ್ರ ಕಲಾ ಪೋಷಣೆ ನಡೆಯುತ್ತದೆ. ಕಲೆಯನ್ನು ಆಸ್ವಾದಿಸುವುದೂ ಒಂದು ಕಲೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಸೈನ್ಸಸ್ ಅಂಡ್ ರೀಸರ್ಚ್ ಇನ್ಸ್ಟಿಟ್ಯೂಟ್ನ ಎನ್.ಎಂ.ನಾರಾಯಣಸ್ವಾಮಿ, ಎಂ.ಎನ್.ರಾಮಲಕ್ಷ್ಮಮ್ಮ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷ ಮುನಿಸ್ವಾಮಿ, ಎಂ.ಎನ್.ವೆಂಕಟೇಶ್, ವೆಂಕಟರಮಣಪ್ಪ, ಸಾಹಿತಿ ಸರಸಮ್ಮ, ಸಂಗೀತ ಶಿಕ್ಷಕ ಮಹಾಲಿಂಗಯ್ಯ ಮಠದ್, ಆರ್.ರಾಜಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.