ADVERTISEMENT

ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ: ಕರವೇ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 8:48 IST
Last Updated 6 ಡಿಸೆಂಬರ್ 2020, 8:48 IST
ಶಿಡ್ಲಘಟ್ಟ ತಾಲ್ಲೂಕು ಕಚೇರಿ ಮುಂಭಾಗ ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೆ. ಅರುಂಧತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಶಿಡ್ಲಘಟ್ಟ ತಾಲ್ಲೂಕು ಕಚೇರಿ ಮುಂಭಾಗ ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೆ. ಅರುಂಧತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಶಿಡ್ಲಘಟ್ಟ: ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು ಕೂಡಲೇ ಇದನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎ. ನಾಗರಾಜ್ ಒತ್ತಾಯಿಸಿದರು.

ಮರಾಠ ನಿಗಮ ವಿರೋಧಿಸಿ ರಾಜ್ಯದಾದ್ಯಂತ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಕನ್ನಡ ರಕ್ಷಣಾ ವೇದಿಕೆಯಿಂದ ನಗರದ ತಾಲ್ಲೂಕು ಕಚೇರಿ ಮುಂಭಾಗ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಸುಮಾರು ಆರೂವರೆ ಕೋಟಿ ಕನ್ನಡಿಗರ ಭಾವನೆಗಳನ್ನು ಬದಿಗಿಟ್ಟು ಕೇವಲ ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿದೆ. ಸಾಲದ್ದಕ್ಕೆ ತಾವು ಮಾಡಿರುವ ಕೆಲಸವನ್ನು ಸಮರ್ಥಿಸಿಕೊಳ್ಳಲು ತಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಂದ ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರನ್ನು ಅವಮಾನಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ದೂರಿದರು.

ADVERTISEMENT

ಮರಾಠ ನಿಗಮವನ್ನು ಕೂಡಲೇ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟಗಳನ್ನು ರೂಪಿಸಲಾಗುವುದು ಎಂದು ಎಚ್ಚರಿಸಿ ತಹಶೀಲ್ದಾರ್ ಕೆ. ಅರುಂಧತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ತಮೀಮ್ ಅನ್ಸಾರಿ, ತಾಲ್ಲೂಕು ಕಾರ್ಯದರ್ಶಿ ನಾಗರಾಜ್, ನಗರಾಧ್ಯಕ್ಷ ಅಕ್ರಂ ಪಾಷಾ, ಪದಾಧಿಕಾರಿಗಳಾದ ನ್ಯಾಮತ್ ‌ಉಲ್ಲಾ, ಅಖಿಲ್‌ಖಾನ್, ಇಶ್ರತ್ ಖಾನ್, ಶ್ರೀನಾಥ್
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.