ADVERTISEMENT

ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಸೌಕರ್ಯ ಕಲ್ಪಿಸದ ಜನಪ್ರತಿನಿಧಿಗಳ ವಿರುದ್ಧ ಗುಟ್ಟೇನಹಳ್ಳಿ ಜನರ ಕಿಡಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 5:41 IST
Last Updated 28 ಮಾರ್ಚ್ 2023, 5:41 IST
ಗೌರಿಬಿದನೂರು ತಾಲ್ಲೂಕಿನ ಗುಟ್ಟೇನಹಳ್ಳಿಯ ಗ್ರಾಮಸ್ಥರು ಗ್ರಾಮದಲ್ಲಿ ಮತದಾನ ಬಹಿಷ್ಕಾರ ಆಂದೋಲನಕ್ಕೆ ಮುಂದಾಗಿರುವುದು
ಗೌರಿಬಿದನೂರು ತಾಲ್ಲೂಕಿನ ಗುಟ್ಟೇನಹಳ್ಳಿಯ ಗ್ರಾಮಸ್ಥರು ಗ್ರಾಮದಲ್ಲಿ ಮತದಾನ ಬಹಿಷ್ಕಾರ ಆಂದೋಲನಕ್ಕೆ ಮುಂದಾಗಿರುವುದು   

ಗೌರಿಬಿದನೂರು: ತಾಲ್ಲೂಕಿನ ಡಿ.ಪಾಳ್ಯ ಹೋಬಳಿ ನಾಮಗೊಂಡ್ಲು ಗ್ರಾ.ಪಂ ವ್ಯಾಪ್ತಿಯಲ್ಲಿನ ಗುಟ್ಟೇನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಕಳೆದೊಂದು ವಾರದಿಂದ ಮತದಾನ ಬಹಿಷ್ಕಾರ ಆಂದೋಲನ ಆರಂಭಿಸಿದ್ದಾರೆ. ಈ ಬಗ್ಗೆ ಗ್ರಾಮದಲ್ಲಿ ಪ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಾರೆ.

ಗ್ರಾಮದಲ್ಲಿ ಸೂಕ್ತ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಕಳೆದ 30 ವರ್ಷಗಳಿಂದಲೂ ಸ್ಥಳೀಯ ಜನಪ್ರತಿನಿಧಿಗಳು ‌ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಯಾರು ಸ್ಪಂದಿಸಿಲ್ಲ. ಆದರೆ ಎಲ್ಲರೂ ಚುನಾವಣೆಗಳು ‌ಸಂದರ್ಭದಲ್ಲಿ ಕೇವಲ ಭರವಸೆಗಳನ್ನು ನೀಡಿ ಬಳಿಕ ಸುಮ್ಮನಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

‘ಇದರಿಂದಾಗಿ ಮಳೆಗಾಲದಲ್ಲಿ ತೀವ್ರ ಸಮಸ್ಯೆ ಎದುರಿಸುವಂತಾಗಿದೆ‌. ಈ ಬಾರಿಯ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನಾವೆಲ್ಲರೂ ಒಮ್ಮತದಿಂದ ಬಹಿಷ್ಕಾರ ಮಾಡುತ್ತಿದ್ದೇನೆ. ಕನಿಷ್ಟ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗದವರು ನಮ್ಮನ್ನು ಮತದಾನ ಕೇಳುವ ಅರ್ಹತೆ ಇರುವುದಿಲ್ಲ. ನಾವೆಲ್ಲರೂ ಸಾಮೂಹಿಕವಾಗಿ ಮತದಾನವನ್ನು ಬಹಿಷ್ಕಾರ ಮಾಡುತ್ತಿದ್ದೇವೆ’ ಎಂದು ಸ್ಥಳೀಯ ಅಶೋಕ್.

ADVERTISEMENT

‘ಗ್ರಾಮದಿಂದ ನೆರೆಯ ಹೋಬಳಿ ಹಾಗೂ ತಾಲ್ಲೂಕು ಕೇಂದ್ರಕ್ಕೆ ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ ಜನತೆ ಪರದಾಡುತ್ತಿದ್ದೇವೆ. ಮಳೆಗಾಲದಲ್ಲಿ ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಇರುತ್ತದೆ. ಆದರೂ ಕೂಡ ಅಧಿಕಾರಿಗಳು ಮತ್ತು‌ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ’ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.