ADVERTISEMENT

ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ‌ ಮಹಿಳೆ ಸಾವು: ತನಿಖೆಗೆ ಸಚಿವರ ಆದೇಶ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 12:03 IST
Last Updated 9 ಸೆಪ್ಟೆಂಬರ್ 2020, 12:03 IST
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್   

ಚಿಕ್ಕಬಳ್ಳಾಪುರ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತಾನಹರಣ ಶಸ್ತ್ರ ಚಿಕಿತ್ಸಾ ವೇಳೆ 30 ವರ್ಷದ ಮಹಿಳೆ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ. ಇದು ಸರ್ವೇ ಸಾಮಾನ್ಯ ಶಸ್ತ್ರಚಿಕಿತ್ಸೆ. ಈ ವೇಳೆ ಸಾವು‌ ಸಂಭವಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಯಾವ ಕಾರಣಕ್ಕೆ ಸಾವಾಗಿದೆ‌ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕು. ಈಗಾಗಲೇ ಇಲಾಖೆ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಒಂದು ವೇಳೆ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮರಣೋತ್ತರ ಪರೀಕ್ಷಾ ವರದಿ ಕೈಸೇರುವವರೆಗೂ ಯಾರ ಮೇಲೂ ಆಪಾದನೆ ಮಾಡಲಾಗದು. ಆದರೆ ಮಹಿಳೆ ಸಾವಿನ ಬಗ್ಗೆ ಕನಿಕರವಿದೆ. ಅವರ ಕುಟುಂಬಕ್ಕೆ ಆರ್ಥಿಕ ನೆರವು ಸಿಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ ಎಂದರು.

ADVERTISEMENT

ಇಂಥ ಪ್ರಕರಣದಲ್ಲಿ ಅನಸ್ತೇಶಿಯ ಪ್ರಮಾಣ ಅಧಿಕವಾದಾಗ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು. ಇದರಲ್ಲಿ ಲೋಪವಾಗಿದೆಯೇ ಎಂಬುದು ತನಿಖೆಯಿಂದಷ್ಟೇ ದೃಢವಾಗಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸರ್ಜನ್ ವಿರುದ್ಧ ಎಸ್‌ಪಿ ಎಫ್‌ಐಆರ್‌ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. ವೈದ್ಯಕೀಯ ನಿರ್ಲಕ್ಷ್ಯದ‌ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸುವಂತಿಲ್ಲ. ವೈದ್ಯ ಸಮೂಹ ಇದರಿಂದ ಗಾಬರಿ ಆಗುವ ಅವಶ್ಯಕತೆ ಇಲ್ಲ. ಈ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.