
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿವಿಧ ಯೋಜನೆಗಳಡಿ 52,000 ನೋಂದಾಯಿತ ಕಾರ್ಮಿಕರಿಗೆ ₹ 34 ಕೋಟಿ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮತ್ತು ಸಾರಿಗೆ ಇಲಾಖೆ ಸಹಯೋಗದಲ್ಲಿ ಬುಧವಾರ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನಗರದಲ್ಲಿ ನಡೆದ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಯಾವ ರಾಜ್ಯದಲ್ಲೂ ಜಾರಿ ಮಾಡದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ‘ಗಿಗ್’ ಜಾರಿಗೊಳಿಸಲಾಗಿದೆ. ಕಾರ್ಮಿಕ ಇಲಾಖೆ ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿಯೇ ಮೊದಲು ಎನಿಸಿರುವ ಕಾರ್ಮಿಕರ ಪರವಾದ ಮೂರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ದ್ವಿಚಕ್ರ ವಾಹನ ಸೇರಿದಂತೆ ವಿವಿಧ ಸಾರಿಗೆ ವ್ಯವಸ್ಥೆಯ ಮೂಲಕ ಆಹಾರ ಪೂರೈಕೆ ಮತ್ತಿತರ ಸೇವೆಗಳನ್ನು ನೀಡುತ್ತಿರುವ ಸ್ವಿಗ್ಗಿ, ಜೊಮ್ಯಾಟ್ ಇನ್ನಿತರ ಕಂಪನಿಗಳ ಕಾರ್ಮಿಕರ ಅನುಕೂಲಕ್ಕಾಗಿ ‘ಗಿಗ್’ ಎಂಬ ವಿಶಿಷ್ಟ ಯೋಜನೆ ಜಾರಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಜನರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಖಾಸಗಿ ಉದ್ಯೋಗದಾತರು ಅಥವಾ ಮಾಲೀಕರನ್ನು ಉತ್ತೇಜಿಸುವ ಆಶಾದೀಪ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಜಾರಿ ಮಾಡಿದೆ. ರಾಜ್ಯದಲ್ಲಿ 91 ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಗುರುತಿಸಲಾಗಿದೆ. ಅವರ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ಧನ, ಅಪಘಾತ ವಿಮೆ, ಜೀವ ವಿಮೆ ಮುಂತಾದ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಗೃಹಕೆಲಸ ಕಾರ್ಮಿಕರಿಗಾಗಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ ವಿಶೇಷ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದರು.
ಆಶಾ ದೀಪ ಯೋಜನೆಯಡಿ ಈವರೆಗೆ ₹ 17.45 ಕೋಟಿ ಒದಗಿಸಲಾಗಿದೆ. 6,345 ನಿರುದ್ಯೋಗಿ ಯುವಜನರು ಫಲಾನುಭವಿಗಳಾಗಿದ್ದಾರೆ ಎಂದರು.
ಅಪಘಾತದಲ್ಲಿ ಮೃತಪಟ್ಟ ಅಸಂಘಟಿತ ಕಾರ್ಮಿಕರ ಕುಟುಂಬಗಳಿಗೆ ಅಪಘಾತ ವಿಮೆ, ಜೀವವಿಮೆ ಹಾಗೂ ಶೈಕ್ಷಣಿಕ ಪ್ರೋತ್ಸಾಹಧನ ಮತ್ತು ಅಂಗವಿಕಲ ಪ್ರೋತ್ಸಾಹಧನ, ಪರಿಹಾರದ ಚೆಕ್ಕುಗಳು ಹಾಗೂ ಸ್ಮಾರ್ಟ್ ಕಾರ್ಡ್ಗಳನ್ನು ಸಂತೋಷ್ ಲಾಡ್ ವಿತರಿಸಿದರು.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ‘ಕಾರ್ಮಿಕ ಇಲಾಖೆಯಲ್ಲಿ ಸಚಿವರು ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದರೆ ಸೌಲಭ್ಯಗಳು ದೊರೆಯುತ್ತವೆ’ ಎಂದರು.
ಪ್ರತಿ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಯೋಜನೆಯಿಂದ ₹ 2 ಸಾವಿರ ನೀಡುತ್ತಿದ್ದೇವೆ. ಈ ಹಣವು ಹಲವು ಕುಟುಂಬಗಳ ಬದುಕಿಗೆ ಆಧಾರವಾಗಿದೆ ಎಂದು ಹೇಳಿದರು.
ಗ್ರಾಮೀಣ ಯುವ ಕಲಾ ಸಂಘದ ಗೊಟ್ಲಗುಂಟೆ ವೆಂಕಟರಮಣಪ್ಪ ನೇತೃತ್ವದಲ್ಲಿ
ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಇರುವ ಸೌಲಭ್ಯ ಗಳ ಕುರಿತು ನಾಟಕ ಮತ್ತು ನೃತ್ಯದ ಮೂಲಕ ಅರಿವು ಮೂಡಿಸಲಾಯಿತು.
ಲಿಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗರಾಜ್, ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಅಶ್ವಿನ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬನಾ ಅಜ್ಮಿ ಮತ್ತಿತರರು ಪಾಲ್ಗೊಂಡಿದ್ದರು.
ಸೊಸೈಟಿ ಸ್ಥಾಪನೆ
ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ನೀಡಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೊಸೈಟಿ ಸ್ಥಾಪಿಸಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದರು. ಆ ಮೂಲಕ ನೇರವಾಗಿ ಸಂಬಂಧಪಟ್ಟ ನೌಕರರ ಖಾತೆಗೆ ವೇತನ ಜಮೆ ಮಾಡಲಾಗುವುದು. ಇದರಿಂದ ಹೊರಗುತ್ತಿಗೆ ನೌಕರರ ವೇತನ ಮತ್ತು ಸೌಲಭ್ಯಗಳನ್ನು ಮಧ್ಯವರ್ತಿ ಏಜೆನ್ಸಿಗಳು ದುರುಪಯೋಗ ಮಾಡಿಕೊಳ್ಳುವುದನ್ನು ತಡೆಯಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.