ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರಕ್ತದ ಕೊರತೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 2:14 IST
Last Updated 23 ಜನವರಿ 2021, 2:14 IST
ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಯುವಕರು ಹಾಗೂ ಮುಖಂಡರು ಭಾಗವಹಿಸಿದ್ದರು
ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಯುವಕರು ಹಾಗೂ ಮುಖಂಡರು ಭಾಗವಹಿಸಿದ್ದರು   

ಚಿಂತಾಮಣಿ: ಕೋವಿಡ್-19 ಹಿನ್ನೆಲೆಯಲ್ಲಿ ರಕ್ತದಾನ ಮಾಡುವವರ ಹಿಂಜರಿಕೆಯಿಂದ ರಕ್ತ ಸಂಗ್ರಹಣೆಗೆ ತೀವ್ರ ಹಿನ್ನಡೆಯಾಗಿದೆ. ಜಿಲ್ಲೆಯ ರಕ್ತದ ಕೊರತೆ ಎದುರಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಕಾರ್ಯದರ್ಶಿ ನಾರಾಯಣರೆಡ್ಡಿ ತಿಳಿಸಿದರು.

ತಾಲ್ಲೂಕಿನ ಕೈವಾರದ ಶಾದಿಮಹಲ್‌ನಲ್ಲಿ ಇಬ್ರಾಹಿಂ ಶಾವಲ್ಲಿ ಮತ್ತು ಮಕದುಮ್ ಶಾವಲ್ಲಿ ರಹಮತುಲ್ಲಾ ಆಲಯ್ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸುಮಾರು 8 ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಜಿಲ್ಲೆಯಲ್ಲಿ ತಿಂಗಳಿಗೆ ಸುಮಾರು ಒಂದು ಸಾವಿರ ಯುನಿಟ್ ರಕ್ತದ ಅವಶ್ಯಕತೆ ಇದೆ. ಜಿಲ್ಲೆಯ ಜನರು ಸ್ವಯಂಪ್ರೇರಿತವಾಗಿ ನೀಡುವ ರಕ್ತದಾನದಿಂದ ರಕ್ತವನ್ನು ಸಂಗ್ರಹಣೆ ಮಾಡಲಾಗುತ್ತಿದೆ. ಜಿಲ್ಲೆಯ ಹಾಗೂ ಪಕ್ಕದ ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಆಂಧ್ರಪ್ರದೇಶ ಗಡಿಗಳ ಜನರಿಗೂ ರಕ್ತ ದೊರೆಯುತ್ತಿದೆ ಎಂದು ತಿಳಿಸಿದರು.

ADVERTISEMENT

ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೈವಾರದ ಯುವಕರ ತಂಡ ರಕ್ತ ನೀಡುತ್ತಿರುವುದು ಶ್ಲಾಘನೀಯ. ಮುಂದೆಯೂ ಸಹ ವರ್ಷಕ್ಕೆ ಕನಿಷ್ಠ 2 ಬಾರಿಯಾದರೂ ರಕ್ತದಾನ ಮಾಡಬೇಕು. ನೀವು ಕೊಡುವ ಒಂದು ಯುನಿಟ್ ರಕ್ತದಿಂದ 3 ಜೀವಗಳನ್ನು ಉಳಿಸಬಹುದು. ರಕ್ತದಾನ ಎಲ್ಲ ದಾನಗಳಿಗಿಂತ ಅತ್ಯಂತ ಶ್ರೇಷ್ಠವಾದ ದಾನ ಎಂದರು.

ಮುಖಂಡರಾದ ಸೈಯದ್ ಮುಜಾಹಿದ್, ಮತ್ತು ಮಹ್ಮದ್ ರಿಯಾಜ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ರವಿಕುಮಾರ್, ಡಾ.ಹೇಮಂತ್ ರಾಜ್ ಸಾವಲಗಿ, ಜಾಮಿಯಾ ಮಸೀದಿಅಧ್ಯಕ್ಷ ಮಹ್ಮದ್ ಯಾಸಿನ್,ಶೌಕತ್ ಸಾಬ್, ದರ್ಗಾ ಸಮಿತಿಯ ಸದಸ್ಯರು, ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.