ADVERTISEMENT

ಸಾಮಾಜಿಕ ಪಿಡುಗು ನಿವಾರಿಸಲು ಶ್ರಮಿಸೋಣ: ಶಾಸಕ ಎಂ. ಕೃಷ್ಣಾರೆಡ್ಡಿ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 4:59 IST
Last Updated 27 ಜನವರಿ 2023, 4:59 IST
ಚಿಂತಾಮಣಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು
ಚಿಂತಾಮಣಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು   

ಚಿಂತಾಮಣಿ: ನಗರದ ಝಾನ್ಸಿ ರಾಣಿ ಲಕ್ಷ್ಮಿಭಾಯಿ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಗುರುವಾರ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಸಕ ಎಂ.ಕೃಷ್ಣಾರೆಡ್ಡಿ, ‘ದೇಶದಲ್ಲಿ 74ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿದ್ದ ಜಾತೀಯತೆ, ಮತಾಂಧತೆ, ಅಸ್ಪೃಷ್ಯತೆ, ಅಸಮಾನತೆ ಸೇರಿದಂತೆ ಹಲವು ಪಿಡುಗುಗಳು ಇಂದಿಗೂ ಸಮಾಜವನ್ನು ಕಾಡುತ್ತಿವೆ’ ಎಂದು ಅಭಿಪ್ರಾಯಪಟ್ಟರು.

ದೇಶದ ಮೂಲೆ ಮೂಲೆಗಳಲ್ಲಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಂವಿಧಾನದಲ್ಲಿರುವ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದಿಂದ ದೇಶದ ಆಡಳಿತ ಮುನ್ನಡೆಯುತ್ತಿದೆ. ಅನೇಕ ಮಹಾತ್ಮರ ಮತ್ತು ಜನರ ಹೋರಾಟ, ಚಳುವಳಿಗಳಿಂದ ಸ್ವಾತಂತ್ರ್ಯ ದೊರೆಯಿತು. ಮಹಾತ್ಮರನ್ನು ಸ್ಮರಿಸಿ, ದೇಶದ ಸ್ವಾತಂತ್ರ್ಯದ ರಕ್ಷಣೆಗಾಗಿ ಪಣತೊಡಬೇಕು ಎಂದರು.

ADVERTISEMENT

ದೇಶವು ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದರೂ, ಸಮಾಜದಲ್ಲಿನ ಪಿಡುಗುಗಳನ್ನು ಸಂಪೂರ್ಣವಾಗಿ ತೊಲಗಿಸಲು ಇಂದಿನವರೆಗೆ ಸಾಧ್ಯವಾಗಿಲ್ಲ. ಸ್ವಾತಂತ್ರ್ಯ ದೇಶದ ಕಟ್ಟಕಡೆಯ ಮನುಷ್ಯನವರೆಗೂ ತಲುಪಬೇಕಾದರೆ ಅನಿಷ್ಠ ಪಿಡುಗುಗಳನ್ನು ನಿವಾರಿಸಬೇಕು. ಶಾಂತಿ, ನೆಮ್ಮದಿ, ಸೌಹಾರ್ದತೆ ನೆಲೆಸಬೇಕಾದರೆ ಅನಿಷ್ಠ ಪದ್ಧತಿಗಳು ಅಳಿಯಬೇಕು ಎಂದರು.

ವಿವಿಧ ಶಾಲೆಗಳ ವಿದ್ಯಾರ್ಥಿ ತಂಡಗಳು, ಪೊಲೀಸ್, ಎನ್.ಸಿ.ಸಿ, ಗೃಹರಕ್ಷಕದಳ ಪಥಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸಿದರು. ತಹಶೀಲ್ದಾರ್ ಮುನಿಶಾಮಿರೆಡ್ಡಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಎಸ್‌ಪಿ ಕುಶಾಲ್ ಚೌಕ್ಸೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್, ಉಪಾಧ್ಯಕ್ಷೆ ಸುಹಾಸಿಸಿರೆಡ್ಡಿ, ಪೌರಾಯುಕ್ತ ರಾಘವೇಂದ್ರ
ಗುರು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ಧನರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.