
ಬಾಗೇಪಲ್ಲಿ: ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಗಾಗಿ ತಾಲ್ಲೂಕಿನಲ್ಲಿ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಮಂಗಳವಾರ ತಹಶೀಲ್ದಾರ್ ಮನೀಷಾ ಎನ್. ಪತ್ರಿ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಡಿ.ಸಿ. ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಉತ್ತಮ ಇಳುವರಿ ಕಂಡಿದೆ. ಹಿಂದಿನ ವರ್ಷಗಳಿಗಿಂತ ಈ ಬಾರಿ ರಸಗೊಬ್ಬರ ಕೊರತೆ ನಡುವೆ, ಬಿತ್ತನೆ ಬೀಜ, ತುಂತುರು, ಹನಿ ನೀರಾವರಿಗಳ ಪರಿಕರಗಳನ್ನು ರೈತರು ಅಧಿಕ ಬೆಲೆಯಲ್ಲಿ ಖರೀದಿಸಿದ್ದಾರೆ. ಕೂಲಿ ದರವು ಹೆಚ್ಚಾಗಿದೆ. ಮೆಕ್ಕೆಜೋಳದ ಉತ್ಪಾದನೆ ವೆಚ್ಚ ಅಧಿಕವಾಗಿದೆ ಎಂದು ಹೇಳಿದರು.
ಸಂಘದ ತಾಲ್ಲೂಕು ಕಾರ್ಯದರ್ಶಿ ಡಿ.ಟಿ.ಮುನಿಸ್ವಾಮಿ ಮಾತನಾಡಿ, ಮಾರುಕಟ್ಟೆಯಲ್ಲಿ ಕ್ವಿಂಟಲ್ ಮೆಕ್ಕೆಜೋಳ ₹1,500–₹1,800ವರೆಗೆ ಬಿಕರಿಯಾಗುತ್ತಿದೆ. ಮೆಕ್ಕೆಜೋಳ ಉತ್ಪಾದನೆ ವೆಚ್ಚಕ್ಕೆ ಹೋಲಿಸಿದರೆ, ಈ ದರ ತೀರಾ ಕಡಿಮೆ ಇದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ₹2,400ಕ್ಕೆ ಮಾರಾಟ ಮಾಡಿದರೆ, ಮಾತ್ರವೇ ರೈತರಿಗೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ಮೆಕ್ಕೆಜೋಳ ಖರೀದಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮನೀಷಾ ಎನ್. ಪತ್ರಿ, ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕೆಪಿಆರ್ಎಸ್ ಜಿಲ್ಲಾ ಸಂಚಾಲಕ ಚನ್ನರಾಯಪ್ಪ, ತಾಲ್ಲೂಕು ಉಪಾಧ್ಯಕ್ಷ ಎಂ.ಎನ್. ರಘುರಾಮರೆಡ್ಡಿ, ಖಜಾಂಚಿ ಜಿ. ಕೃಷ್ಣಪ್ಪ, ಅಶ್ವಥ್ಥಪ್ಪ, ರವಣಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.