ಚಿಂತಾಮಣಿ: ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸುವ ಉದ್ದೇಶದಿಂದ ಜಾರಿಗೆ ತಂದ ಮಾತೃವಂದನಾ ಯೋಜನೆ ತಾಲ್ಲೂಕಿನಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ.
ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕತೆ ಕುರಿತು ಶಿಕ್ಷಣ, ಆರೋಗ್ಯ ಸಲಹೆ ನೀಡುವ ಸಲುವಾಗಿ 2010- 11ರಲ್ಲಿ ಇಂದಿರಾ ಗಾಂಧಿ ಮಾತೃತ್ವ ಸಹಯೋಗ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜಾರಿಗೆ ತರಲಾಗಿತ್ತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳು ಕಾರ್ಯಕ್ರಮ ಅನುಷ್ಠಾನಕ್ಕೆ ವೇದಿಕೆಯಾಗಿತ್ತು.
ಯೋಜನೆಯಡಿ, ಜುಲೈನಲ್ಲಿ 174, ಆಗಸ್ಟ್ನಲ್ಲಿ 176 ಗರ್ಭಿಣಿ– ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಗುರಿ ನೀಡಲಾಗಿತ್ತು. ಇದರಲ್ಲಿ ಶೇ 100ರಷ್ಟು ಗುರಿ ಸಾಧಿಸಿದ್ದೇವೆ ಎಂದು ಸಿಡಿಪಿಒ ಮಹೇಂದ್ರ ಮಾಹಿತಿ ನೀಡಿದರು.
2017-18ನೇ ಸಾಲಿನಿಂದ ಯೋಜನೆಯನ್ನು ‘ಪ್ರಧಾನ ಮಂತ್ರಿ ಮಾತೃವಂದಾ’ ಯೋಜನೆ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಈ ಯೋಜನೆಗೆ 60:40ರಂತೆ ಕೇಂದ್ರ- ರಾಜ್ಯ ಸರ್ಕಾರಗಳು ಅನುದಾನ ನೀಡಿವೆ.
ಮೂರು ಕಂತುಗಳಲ್ಲಿ ₹ 5 ಸಾವಿರ ನೀಡಲಾಗುತ್ತದೆ. ಅಪೌಷ್ಟಿಕತೆಯಿಂದ ಬಳಲುವ ಗರ್ಭಿಣಿಯರು ಕಡಿಮೆ ತೂಕದ ಮತ್ತು ಅನಾರೋಗ್ಯ ಪೀಡಿತ ಮಗುವಿಗೆ ಜನ್ಮ ನೀಡುವುದನ್ನು ತಡೆಯುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೂಲಕ ಗರ್ಭಿಣಿಯರನ್ನು ನೋಂದಾ ಯಿಸಿಕೊಂಡು ಅವರಿಗೆ ಯೋಜನೆಯ ಸೌಲಭ್ಯ ತಲುಪಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.