ADVERTISEMENT

ಮದಾರರ ಪಟ್ಟಿ ಲೋಪ ಸರಿಪಡಿಸಿ

ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ.ಜಗದೀಶ್ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 12:48 IST
Last Updated 16 ನವೆಂಬರ್ 2019, 12:48 IST
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ.ಜಗದೀಶ್ ಮಾತನಾಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ.ಜಗದೀಶ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಮತದಾನ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಮೊದಲು ಸರಿಪಡಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ.ಜಗದೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಕೈಗೊಂಡ ಕ್ರಮದ ಕುರಿತ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರ ಚುನಾವಣೆ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದೆ. ಗ್ರಾಮ ಮತ್ತು ತಾಲ್ಲೂಕು ಮಟ್ಟದಲ್ಲಿ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದು ತಿಳಿಸಿದರು.

ADVERTISEMENT

‘ಮತದಾರರ ಪಟ್ಟಿಯಲ್ಲಿ 18 ವರ್ಷ ದಾಟಿದವರ ಹೆಸರನ್ನು ನೂತನವಾಗಿ ಸೇರ್ಪಡೆ ಮಾಡುವುದು, ಮರಣ ಹೊಂದಿದವರನ್ನು ಪಟ್ಟಿಯಿಂದ ತೆಗೆದು ಹಾಕುವುದು, ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಭಾವಚಿತ್ರ, ವಯಸ್ಸು ಮುಂತಾದ ಹಲವಾರು ತಪ್ಪುಗಳನ್ನು ತಿದ್ದುಪಡಿ ಮಾಡಿ ಶೇ 100 ರಷ್ಟು ಮತದಾರರ ವಿವರಗಳನ್ನು ಸರಿಪಡಿಸುವುದಕ್ಕೆ ಅವಕಾಶವಿದೆ’ ಎಂದರು.

‘ಸಾಮಾನ್ಯ ಸೇವಾ ಕೇಂದ್ರ, ಅಟಲ್‌ಜೀ ಜನಸ್ನೇಹಿ ಕೇಂದ್ರ, ಮತದಾರರ ನೊಂದಣಿ ಕಚೇರಿ, ಗ್ರಾಮ ಪಂಚಾಯತಿಯಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿ ನಡೆಯುತ್ತಿರುವ ಪರಿಷ್ಕರಣೆ ಕಾರ್ಯದ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ 1950 ಸಹಾಯವಾಣಿ ಕೇಂದ್ರದಲ್ಲಿ ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳ ಸೇರ್ಪಡೆ, ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ನಾಗರಿಕರು ತಮ್ಮ ಕುಟುಂಬಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಮತದಾರರ ಸಹಾಯವಾಣಿ ಮೊಬೈಲ್ ಆಫ್ www.nvsv.com ನಲ್ಲಿ ದಾಖಲಿಸಿ ಪರಿಶೀಲಿಸಬಹುದು’ ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಸೆ. 1ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಜಿಲ್ಲಾಯಾದ್ಯಂತ ಚಾಲನೆ ನೀಡಿ ಹಂತ ಹಂತವಾಗಿ ನಡೆಸಲಾಗಿದೆ. ಈ ಕಾರ್ಯಕ್ರಮವನ್ನು ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟರು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಪಟ್ಟಿಯ ಪರಿಷ್ಕರಣೆ ನಡೆಸಿದ್ದಾರೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.