
ಬಾಗೇಪಲ್ಲಿ: ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಬಿಸಿಯೂಟ, ಶಾಲಾ ಅನುದಾನಗಳಲ್ಲಿನ ಭ್ರಷ್ಠಾಚಾರ ಮತ್ತು ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿದರು.
ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಎ.ಸೋಮಶೇಖರ ಮಾತನಾಡಿ, ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಯೋಜನೆ ಮತ್ತು ಶಾಲಾ ಅನುದಾನವನ್ನು ಶಾಲಾ ಅಭಿವೃದ್ಧಿ ಸಮಿತಿ ಇಲ್ಲದೆ ಅನುದಾದ ದುಬರ್ಳಕೆ ಮಾಡಲಾಗಿದೆ. ಕಾಳಸಂತೆಯಲ್ಲಿ ಬಿಸಿಯೂಟ, ಅಕ್ಕಿ ಸಾಗಾಣಿಕೆ ಸೇರಿದಂತೆ ವಿದ್ಯಾರ್ಥಿಗಳಿಂದ ಕೆಲಸಗಳು ಮಾಡಿರುವ ವಿಡಿಯೊಗಳು ಲಭ್ಯವಾಗಿವೆ. ಈ ಸಂಬಂಧ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ, ಶಾಲಾ ಅನುದಾನದ ದುರುಪಯೋಗದ ಬಗ್ಗೆ ತನಿಖೆಯಾಗಬೇಕು. ಶಾಲೆ ಅವ್ಯವಹಾರಗಳ ಕುರಿತ ಆರ್ಟಿಐ ಮಾಹಿತಿ ಅಡಿ ತಪ್ಪು ಮಾಹಿತಿ ನೀಡಿದ ನಿಯೋಜಿತ ಮುಖ್ಯ ಶಿಕ್ಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿ ಶಾಲೆಯಲ್ಲಿ ಮಕ್ಕಳ ಹಿತರಕ್ಷಣಾ ಸಮಿತಿ, ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಿ ದೂರು ಪೆಟ್ಟಿಗೆ ಇಡಬೇಕು. ಸರ್ಕಾರಿ ಶಾಲೆಗಳ ಉಳಿವಿಗಾಗಿ ದಾಖಲಾತಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು. ಖಾಸಗಿ ಶಾಲೆ, ಕಾಲೇಜುಗಳ ಡೊನೇಷನ್ ಹಾವಳಿ ತಪ್ಪಿಸಬೇಕು ಎಂದರು.
ಪ್ರತಿಭಟನಾ ಸ್ಥಳಕ್ಕೆ ಬಂದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ವೆಂಕಟೇಶಪ್ಪ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಅವ್ಯವಹಾರದ ಬಗ್ಗೆ ತನಿಖೆ ಮಾಡಿಸಲಾಗುವುದು. ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವುದು ನನ್ನ ಅಧಿಕಾರದ ವ್ಯಾಪ್ತಿಗೆ ಬರದು. ಶಿಕ್ಷಣ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐನ ಜ್ಯೋತಿಪ್ರಕಾಶ್, ಗೌತಮ್, ಕರವೇ ಪದಾಧಿಕಾರಿಗಳಾದ ರವೀಂದ್ರ, ಶಿವಪ್ಪ, ಇದಾಯಿತುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.