ಬಾಗೇಪಲ್ಲಿ: ತಾಲ್ಲೂಕಿನ ಜಂಗಾಲಪಲ್ಲಿ ಗ್ರಾಮದಲ್ಲಿ ಮಕರ ಸಂಕ್ರಾಂತಿ ದಿನದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಸುಗ್ಗಿ-ಹುಗ್ಗಿ’ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿಲ್ಲ ಹಾಗೂ ಮಾಹಿತಿ ನೀಡಿಲ್ಲ. ಇದರಿಂದ ನನ್ನ ಶಾಸಕತ್ವಕ್ಕೆ ಹಕ್ಕುಚ್ಯುತಿ ಆಗಿದೆ. ಕೂಡಲೇ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೃಷಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪತ್ರ ಬರೆದಿದ್ದಾರೆ.
‘ತಾಲ್ಲೂಕಿನ ಜಂಗಾಲಪಲ್ಲಿ ಗ್ರಾಮದಲ್ಲಿ ಜ.14ರ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಸಿರಿಧಾನ್ಯಗಳ ಮೇಳದೊಂದಿಗೆ ಸಂಕ್ರಾಂತಿ ಸಂಭ್ರಮದ ಸುಗ್ಗಿ-ಹುಗ್ಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನನ್ನ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ವಾಟ್ಸ್ಆ್ಯಪ್ಗಳಲ್ಲಿ ಆಹ್ವಾನ ಪತ್ರಿಕೆ ಹರಿದಾಡಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ನನಗೆ ಅಧಿಕೃತವಾಗಿ ಯಾವ ಅಧಿಕಾರಿಯಾದರೂ ನನ್ನನ್ನು ಭೇಟಿ ಮಾಡಿ ಕಾರ್ಯಕ್ರಮದ ಸ್ಥಳದ ಹಾಗೂ ಸಮಯದ ನಿಗದಿ ಬಗ್ಗೆ ಚರ್ಚೆ ಮಾಡಿಲ್ಲ’ ಎಂದು ತಿಳಿಸಿದ್ದಾರೆ.
‘ಸರ್ಕಾರದ ಇಲಾಖೆಗಳ ಯಾವುದೇ ಕಾರ್ಯಕ್ರಮ ಆದರೂ ಸ್ಥಳೀಯ ಶಾಸಕರು ಕಾರ್ಯಕ್ರಮಗಳ ಅಧ್ಯಕ್ಷರಾಗಿದ್ದಾರೆ. ಆದರೆ ಸುಗ್ಗಿ-ಹುಗ್ಗಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಹ ನೀಡಿರುವುದಿಲ್ಲ. ಸಂಬಂಧ ಅಧಿಕಾರಿಗಳು ನನ್ನ ಜೊತೆ ಚರ್ಚೆ ಮಾಡಿರುವು
ದಿಲ್ಲ. ಅಧಿಕಾರಿಗಳು ಕಾರ್ಯಕ್ರಮ ಆಯೋಜಿಸಿರುವುದು ದುರುದ್ದೇಶದಿಂದ ಕೂಡಿದೆ’ ಎಂದು ತಿಳಿಸಿದ್ದಾರೆ.
‘ಕಾರ್ಯಕ್ರಮದ ಆಯೋಜನೆ ಮಾಡಿರುವ ಹಾಗೂ ಭಾಗವಹಿಸಿರುವ ಸರ್ಕಾರಿ ನೌಕರರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ಸರ್ಕಾರದ ಹಕ್ಕುಚ್ಯುತಿಗಳ ಸಮಿತಿಗೆ ವಹಿಸಿ ವಿಚಾರಣೆ ನಡೆಸಬೇಕು. ಶಾಸಕರ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿರುವ ಅಧಿಕಾರಿಗಳ ಹಾಗೂ ಸರ್ಕಾರಿ ನೌಕರರ ವಿರುದ್ಧ ಕ್ರಮ ತೆಗೆದು
ಕೊಳ್ಳುವಂತೆ ಸರ್ಕಾರದ ಹಕ್ಕುಚ್ಯುತಿ ಸಮಿತಿಗೆ ಶಿಫಾರಸ್ಸು ಮಾಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.