ಬಾಗೇಪಲ್ಲಿ: ಗ್ರಾಮೀಣ ಜನರು ಆರ್ಥಿಕ ಸಂಕಷ್ಟದಿಂದ ಪಾರಾಗಲು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಸಲಹೆ ನೀಡಿದರು.
ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ವೆಂಕಟ್ರಾಮಪಲ್ಲಿ ಕೆರೆಯಲ್ಲಿ ಹಮ್ಮಿಕೊಂಡಿದ್ದ ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನ ಜಾಗೃತಿ ಮೂಡಿಸಿ ಮಾತನಾಡಿದರು.
ಗ್ರಾಮೀಣ ಜನರು ಸಂಕಷ್ಟದಲ್ಲಿ ಇದ್ದಾರೆ. ಬೆಳೆಗಳು ಸಂಪೂರ್ಣ ನಾಶ ಆಗಿವೆ. ಮಳೆ, ಬೆಳೆ ಇಲ್ಲ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಜನರು ನರೇಗಾ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಪಂಚಾಯಿತಿವರು ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆಗೆ ಸ್ಯಾನಿಟೈಜರ್, ಮಾಸ್ಕ್ಗಳನ್ನು ವಿತರಿಸಬೇಕು. ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
200 ದಿನಗಳಂತೆ ಪ್ರತಿಯೊಬ್ಬರಿಗೂ ₹600 ಕೂಲಿ ಹಣ ನೀಡಬೇಕು. ಕೇರಳ ಮಾದರಿಯಲ್ಲಿ ಒಂದು ವರ್ಷ ಕಾಲ ಕೂಲಿರ್ಮಿಕರಿಗೆ ದಿನಸಿ, ಅಗತ್ಯ ವಸ್ತುಗಳನ್ನು ನೀಡಬೇಕು. ಪ್ರತಿ 15 ದಿನಗಳಿಗೊಮ್ಮೆ ನರೇಗಾ ಕೂಲಿ ಹಣ ಕೂಲಿಕಾರರ ಖಾತೆಗಳಿಗೆ ಜಮೆ ಮಾಡಬೇಕು ಎಂದು ತಿಳಿಸಿದರು.
ಕೂಲಿಕಾರರ ಸಂಘಟನೆ ಮುಖಂಡ ಎಂ.ಎನ್.ರಘುರಾಮರೆಡ್ಡಿ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಅಧ್ಯಕ್ಷೆ ಬಿ.ಸಾವಿತ್ರಮ್ಮ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.