ಚಿಕ್ಕಬಳ್ಳಾಪುರ: ‘ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸಲು ಕೋವಿಡ್-19 ಸಮಯ ಸೂಕ್ತವಾಗಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು’ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವ ಸಭೆಯಲ್ಲಿ ಅವರು ಮಾತನಾಡಿದರು.
‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕೈಗೊಂಡ ಕ್ರಮಗಳನ್ನು ನಿರಂತರವಾಗಿ ಮುಂದುವರಿಸಬೇಕು. ಫ್ರೌಢಶಾಲೆ ವಿದ್ಯಾರ್ಥಿಗಳಿಗೆ ಈಗಾಗಲೇ ತಯಾರಿಸಿರುವ ವಿಷಯವಾರು ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಿ, ಚೆನ್ನಾಗಿ ಅಭ್ಯಾಸ ಮಾಡಲು ಸೂಚಿಸಬೇಕು’ ಎಮದು ಹೇಳಿದರು.
‘ಆಶಾಕಿರಣ ಶಿಕ್ಷಕರು ಈಗಾಗಲೇೆ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಮುಂದಿನ ಅಭ್ಯಾಸಕ್ಕೆ ಸೇರ್ಪಡೆಯಾಗಿದ್ದಾರಾ ಅಥವಾ ಇಲ್ಲವೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಬೇಕು. ಬಡತನ ಅಥವಾ ಇತರ ಕಾರಣಗಳಿಂದ ಶಿಕ್ಷಣ ಮುಂದುವರಿಸದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು’ ಎಂದು ತಿಳಿಸಿದರು.
‘ಸರ್ಕಾರದಿಂದ ಅನುಮತಿ ಪಡೆದ ವಿದ್ಯಾಗಮ ಪದ್ಧತಿ ಅಂದರೆ ಗುರುಕುಲ ವಿದ್ಯಾಭ್ಯಾಸದ ಮಾದರಿಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಎಸ್ಸೆಸ್ಸೆಲ್ಸಿ ಪಾಠಗಳನ್ನು ಡಿಸೆಂಬರ್ ಒಳಗೆ ಮುಗಿಸಿ ಪರಿಷ್ಕರಿಸಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಶ್ರೇಯಾಂಕ ಗಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು‘ ಎಂದು ಸೂಚಿಸಿದರು.
‘ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಅವಶ್ಯವಿರುವ ಮತ್ತು ಜಾಗದ ಲಭ್ಯತೆ ಇರುವ ಶಾಲೆಗಳಿಗೆ ಮಳೆ ನೀರು ಸಂಗ್ರಹ ವ್ಯವಸ್ಥೆ, ಕೈತೋಟ ಸೇರಿದಂತೆ ಅವಶ್ಯವಾದ ಕಟ್ಟಡ, ಕಾಂಪೌಂಡ್, ಕೊಠಡಿ, ಆಟದ ಮೈದಾನಗಳ ನಿರ್ಮಾಣ ಅಥವಾ ದುರಸ್ಥಿಗಳನ್ನು ದಾನಿಗಳ ಸಹಾಯದಿಂದ ನಡೆಸಬೇಕು’ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಜಿ.ನಾಗೇಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.