ಚಿಂತಾಮಣಿ: ‘ಲೋಕಸಭೆ ಹಾಗೂ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಬೆಸ್ಕಾಂ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುವುದಿಲ್ಲ. ಕಾರ್ಯಕ್ರಮವನ್ನು ಮುಂದೂಡಿ ಎಂದು ತಿಳಿಸಿದ್ದರೂ ಸಹ ಶಿಷ್ಟಾಚಾರವನ್ನು ಉಲ್ಲಂಘಿಸಿ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿರುವ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು’ ಎಂದು ಸಂಸದ ಎಸ್. ಮುನಿಸ್ವಾಮಿ ಒತ್ತಾಯಿಸಿದರು.
‘ನಗರದ ಬೆಸ್ಕಾಂ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕಚೇರಿಯ ನೂತನ ಕಟ್ಟಡವನ್ನು ಗುರುವಾರ ಉಸ್ತುವಾರಿ ಸಚಿವರು ಮತ್ತು ಸಂಸದರನ್ನು ಕಡೆಗಣಿಸಿ ಉದ್ಘಾಟನೆ ಮಾಡಿರುವ ಕ್ರಮ ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನಕ್ಕೆ ಎಸಗಿದ ಅಪಚಾರವಾಗಿದೆ. ಶಾಸಕರು ತೊಗಲಕ್ ದರ್ಬಾರ್ ಮಾಡುತ್ತಿರುವುದು ಖಂಡನೀಯ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ತಿಳಿಸಿದರು.
‘ಜನಸಾಮಾನ್ಯರಲ್ಲಿ ಸಾಮಾನ್ಯರಾಗಿ ಬೆರತು ಕೆಲಸ ಮಾಡಬೇಕು. ಈಗಾಗಲೇ ಗ್ರಾಮ ಪಂಚಾಯಿತಿ, ನಗರಸಭೆ ಚುನಾವಣೆಯಲ್ಲಿ ಮತದಾರರು ಶಾಸಕರಿಗೆ ಬುದ್ಧಿ ಕಲಿಸಿದ್ದಾರೆ. ಮುಂದಿನ ದಿನಗಳಲ್ಲಾದರೂ ಶಿಷ್ಟಾಚಾರವನ್ನು ಪಾಲಿಸಿಕೊಂಡು ಕೆಲಸ ಮಾಡಲಿ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.