ADVERTISEMENT

ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದ ಯುವಕನ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 12:57 IST
Last Updated 29 ಜನವರಿ 2023, 12:57 IST

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದಿದ್ದ ದೊಡ್ಡಬಳ್ಳಾಪುರದ ಮನೋಜ್ ಕುಮಾರ್ ಎಂಬುವವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಸುಲ್ತಾನ್ ಪೇಟೆ ಮಾರ್ಗದಲ್ಲಿ ನಂದಿಗಿರಿಧಾಮಕ್ಕೆ ಮೆಟ್ಟಿಲುಗಳ ಮೂಲಕ ಮನೋಜ್ ಹಾಗೂ ಅವರ ಇಬ್ಬರು ಸ್ನೇಹಿತರು ಹತ್ತಿದ್ದಾರೆ. ಈ ಮಾರ್ಗದಲ್ಲಿರುವ ವೀರಭದ್ರೇಶ್ವರ ದೇಗುಲದ ಬಳಿ ಹೋದಾಗ ಮನೋಜ್ ಆಯತಪ್ಪಿ ಜಾರಿದ್ದಾರೆ. 80 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದಾರೆ. ತಕ್ಷಣ ಅವರ ಸ್ನೇಹಿತರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮನೋಜ್ ಕುಮಾರ್ ಅವರನ್ನು ರಕ್ಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ‘ಮನೋಜ್ ಕುಮಾರ್ ಅವರ ಕಾಲಿನ ಮೂಳೆ ಮುರಿದಿದೆ. ಪ್ರಾಣಾಪಾಯವಿಲ್ಲ’ ಎಂದು ನಂದಿಗಿರಿಧಾಮ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

2022ರ ಫೆಬ್ರುವರಿಯಲ್ಲಿಯೂ ಇದೇ ರೀತಿಯ ದುರ್ಘಟನೆ ನಡೆದಿತ್ತು. ನಂದಿಗಿರಿಧಾಮದಲ್ಲಿ 300 ಅಡಿ ಆಳದ ಪ್ರಪಾತಕ್ಕೆ ಬಿದಿದ್ದ ನಿಶಾಂಕ್ ಎಂಬುವವರನ್ನು ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿ ಹೆಲಿಕಾಪ್ಟರ್‌ ಮೂಲಕ ರಕ್ಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.