ADVERTISEMENT

ಚಿಂತಾಮಣಿ: ನವರಾತ್ರಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 6:37 IST
Last Updated 8 ಅಕ್ಟೋಬರ್ 2021, 6:37 IST

ಚಿಂತಾಮಣಿ: ಕೋವಿಡ್ಸೋಂಕು ಕಡಿಮೆಯಾಗಿರುವುದರಿಂದ ನಗರ ಹಾಗೂ ತಾಲ್ಲೂಕಿನಾದ್ಯಂತ ದುರ್ಗಾದೇವಿ ಆರಾಧನೆಗೆ ಸಿದ್ಧತೆ ಮಾಡಿಕೊಂಡಿರುವ ಭಕ್ತರು ವಿವಿಧ ದೇವಾಲಯಗಳಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ.

ಕೋವಿಡ್ ಮಹಾಮಾರಿ ಕಾರಣದಿಂದ ಕಳೆದ 2 ವರ್ಷಗಳಿಂದ ನವರಾತ್ರಿ ಹಬ್ಬವನ್ನು ಸಾಂಕೇತಿಕವಾಗಿ ಅತ್ಯಂತ ಸರಳವಾಗಿ ಆಚರಿಸಲಾಗಿತ್ತು. ಈ ವರ್ಷ ಕೋವಿಡ್ ಮಾರ್ಗಸೂಚಿ ಜಾರಿಯಲ್ಲಿದ್ದರೂ ಪ್ರಕರಣಗಳು ಕಡಿಮೆಯಾಗಿವೆ. ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲು ಸಡಿಲಿಕೆ ನೀಡಲಾಗಿದೆ. ಹೀಗಾಗಿ ಮಹಾನವಮಿ ಹಬ್ಬದ ಸಂತಸ, ಸಂಭ್ರಮದ ವಾತಾವರಣ ಕಂಡುಬರುತ್ತಿದೆ.

ಪ್ರಸಕ್ತ ವರ್ಷ ಉತ್ತಮ ಮುಂಗಾರು ಮಳೆಯಾಗಿದ್ದು ರೈತರು ಮತ್ತು ಕೃಷಿ ಕಾರ್ಮಿಕರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕೋವಿಡ್ ಸಂಕಷ್ಟದಿಂದ ಹೊರಬರುವ ಪ್ರಯತ್ನದಲ್ಲಿ ಇದ್ದಾರೆ. ಮುಂಗಾರು ಬೆಳೆಗಳು ಚೆನ್ನಾಗಿ ಬೆಳೆಯುತ್ತಿವೆ. ಉತ್ತಮ ಫಸಲು ಸಿಗುತ್ತದೆ ಎನ್ನುವ ನಿರೀಕ್ಷೆಯಿಂದ ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.

ADVERTISEMENT

ಶಕ್ತಿದೇವತೆಗಳಿರುವ ದೇವಸ್ಥಾನಗಳಲ್ಲಿ ನವರಾತ್ರಿ ಯುದ್ದಕ್ಕೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ವಿಧಿವಿಧಾನಗಳಂತೆ ಆಚರಿಸುವುದು ಸಂಪ್ರದಾಯ. ಗುರುವಾರದಿಂದ ನಗರದ ಶ್ರೀನಿವಾಸ ಕಲ್ಯಾಣ ಮಂದಿರ, ಅಜಾದ್‌ ಚೌಕ, ವಾಸವಿ ದೇವಾಲಯ, ಆಲಂಬಗಿರಿಯ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯ, ಕೈವಾರದ ಅಮರನಾರೇಯಣಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ಗುರುವಾರದಿಂದ ಅ. 15ರವರೆಗೂ ಪ್ರತಿನಿತ್ಯ ವಿಶೇಷ ಕಾರ್ಯಕ್ರಮ ಜರುಗುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.