ADVERTISEMENT

ಅಗತ್ಯ ಪ್ರಮಾಣದ ಔಷಧಿ ಸಿಗುತ್ತಿಲ್ಲ: ಸಚಿವ ಡಾ.ಕೆ. ಸುಧಾಕರ್‌

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 4:28 IST
Last Updated 1 ಜೂನ್ 2021, 4:28 IST
ಡಾ.ಸುಧಾಕರ್‌
ಡಾ.ಸುಧಾಕರ್‌   

ಚಿಕ್ಕಬಳ್ಳಾಪುರ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಸೋಂಕಿಗೆ ಎಲ್ಲ ಜಿಲ್ಲೆಗಳಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯ ಎಂಟರಿಂದ ಹತ್ತು ಸಾವಿರ ವಯಲ್ಸ್ ಅಗತ್ಯವಿದೆ. ಒಬ್ಬ ಸೋಂಕಿತರಿಗೆ ಕನಿಷ್ಠ ಮೂರ್ನಾಲ್ಕು ದಿನ ನಿತ್ಯ ಆರು ವಯಲ್ಸ್ ಔಷಧಿ ಕೊಡಬೇಕು. ಆ ನಂತರ ಕಡಿಮೆ ಮಾಡಬಹುದು ಎಂದು ಹೇಳಿದರು.

ಕಪ್ಪು ಶಿಲೀಂಧ್ರ ನಿಯಂತ್ರಣ ಔಷಧಿಗೆ ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಮೂಲಕ ಕೇಂದ್ರ ಸರ್ಕಾರದಿಂದ ಔಷಧಿ ತರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ADVERTISEMENT

ಮುಂದಿನ ಒಂದು ತಿಂಗಳ ಅವಧಿಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯು ವರದಿ ನೀಡಿದೆ. ವರದಿಯ ಅಂಶಗಳ ಬಗ್ಗೆ ಚರ್ಚಿಸಲು ಮಂಗಳವಾರ (ಜೂ.1) ಮುಖ್ಯಮಂತ್ರಿ ಅವರು ಸಚಿವರ ಸಭೆ ಕರೆದಿದ್ದಾರೆ. ಆ ಸಭೆಯ ನಂತರ ಅವರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಿದರು.

ಲಾಕ್‌ಡೌನ್‌ನಿಂದ ಸೋಂಕಿನ ಪ್ರಮಾಣ ತಗ್ಗಿದೆ. ಶೇ 40ರಿಂದ 50ರಷ್ಟಿದ್ದ ಸೋಂಕಿನ ಪ್ರಮಾಣ ಶೇ 15ಕ್ಕೆ ಇಳಿದಿದೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.