ಬಾಗೇಪಲ್ಲಿ: ತಾಲ್ಲೂಕಿನ ಎಲ್ಲಾ ಗ್ರಾಮ ಹಾಗೂ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಕಾಯ್ದಿರಿಸಲು ಅವಕಾಶವಿದೆ. ಸ್ಮಶಾನದ ಅವಶ್ಯಕತೆ ಇದ್ದರೆ ಸಾರ್ವಜನಿಕರು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ತಹಶೀಲ್ದಾರ್ ವೈ. ರವಿ ಮನವಿ ಮಾಡಿದ್ದಾರೆ.
ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಸರ್ಕಾರದ ಜಮೀನು ಲಭ್ಯ ಇರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ ಎರಡು ಎಕರೆ ಜಮೀನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದರೆ ಜಿಲ್ಲಾಧಿಕಾರಿ ಹಂತದಲ್ಲಿ ಅನರ್ಹ ಅರ್ಜಿಗಳನ್ನು ವಜಾಗೊಳಿಸಲಾಗುವುದು. ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾರ್ಯ ಅಥವಾ ಜಲಮೂಲಗಳೆಂದು ವರ್ಗಿಕೃತವಾದ ಜಮೀನು, ಗ್ರಾಮ ನಕಾಶೆಯಲ್ಲಿ ರಸ್ತೆ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.