ಗೌರಿಬಿದನೂರು: ತಾಲ್ಲೂಕಿನ ವಿದುರಾಶ್ವತ್ಥದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಪೋಷಣ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಶಿಬಿರ ಆಯೋಜಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಪಾರಿಜಾತ ಮಾತನಾಡಿ, ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ ನಿತ್ಯ ಪೌಷ್ಟಿಕ ಆಹಾರ ಸೇವಿಸುವಂತೆ ನಿರ್ದೇಶನ ನೀಡಬೇಕಿದೆ ಎಂದರು.
ಬೆಳೆಯುವ ಮಕ್ಕಳಲ್ಲಿ ಯಾವುದೇ ನ್ಯೂನತೆ ಇಲ್ಲದಂತೆ ನೋಡಿಕೊಳ್ಳುವ ಜವಾಬ್ದಾರಿ ಕೇಂದ್ರದ ಕಾರ್ಯಕರ್ತರದ್ದಾಗಿರುತ್ತದೆ. ಪೋಷಕರು ಮಕ್ಕಳಿಗೆ ಸೊಪ್ಪು, ಕಾಳುಗಳು, ಮೊಟ್ಟೆ, ತರಕಾರಿ, ಹಣ್ಣು, ಹಾಲು ಸೇರಿದಂತೆ ಇನ್ನಿತರ ಉತ್ತಮ ಪೋಷಕಾಂಶಗಳುಳ್ಳ ಆಹಾರ ನೀಡಬೇಕು. ಈ ಮೂಲಕ ಮಕ್ಕಳ ಬೆಳವಣಿಗೆಗೆ ಶ್ರಮಿಸಬೇಕು ಎಂದರು.
ಆರೋಗ್ಯ ಇಲಾಖೆಯ ಶರಣಪ್ಪ ಮಾತನಾಡಿ, ಪ್ರತೀ ಅಂಗನವಾಡಿ ಕೇಂದ್ರದಲ್ಲಿ ಶುಚಿತ್ವ ಮತ್ತು ಉತ್ತಮ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಲ ಕಾಲಕ್ಕೆ ಚುಚ್ಚುಮದ್ದುಗಳನ್ನು ಕೊಡಿಸುವ ಜತೆಗೆ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಎಂದರು.
ಅಂಗನವಾಡಿ ಕೇಂದ್ರದ ಶಿಕ್ಷಕಿ ಆರ್.ರಾಧ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಕೇಂದ್ರಕ್ಕೆ ಕಳುಹಿಸಬೇಕು. ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕ ಆಹಾರ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದರು.
ಆಸ್ಪತ್ರೆಯ ಎಎನ್ಎಂ ಗೀತಾ, ಭಾಗ್ಯ, ವಿದುರಾಶ್ವತ್ಥ ವೃತ್ತದ ವ್ಯಾಪ್ತಿಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.