ADVERTISEMENT

ಚಿಕ್ಕಬಳ್ಳಾಪುರ: ಪ್ರತಿಬಂಧಕಾಜ್ಞೆ ಒಂದು ವಾರ ವಿಸ್ತರಣೆ

ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 14:18 IST
Last Updated 20 ಮಾರ್ಚ್ 2020, 14:18 IST
ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಕಚೇರಿ ವತಿಯಿಂದ ಜಿಲ್ಲಾಡಳಿತಕ್ಕೆ ನೀಡಿದ 1,000 ಮುಖಗವಸುಗಳನ್ನು (ಮಾಸ್ಕ್‌) ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಎಂ.ಯೋಗೇಶ್‌ಗೌಡ ಅವರು ಜಿಲ್ಲಾಧಿಕಾರಿ ಆರ್.ಲತಾ ಅವರಿಗೆ ಹಸ್ತಾಂತರಿಸಿದರು.
ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಕಚೇರಿ ವತಿಯಿಂದ ಜಿಲ್ಲಾಡಳಿತಕ್ಕೆ ನೀಡಿದ 1,000 ಮುಖಗವಸುಗಳನ್ನು (ಮಾಸ್ಕ್‌) ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಎಂ.ಯೋಗೇಶ್‌ಗೌಡ ಅವರು ಜಿಲ್ಲಾಧಿಕಾರಿ ಆರ್.ಲತಾ ಅವರಿಗೆ ಹಸ್ತಾಂತರಿಸಿದರು.   

ಚಿಕ್ಕಬಳ್ಳಾಪುರ: ‘ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಮುಂದಿನ ಒಂದು ವಾರ ಪ್ರತಿಬಂಧಕಾಜ್ಞೆ ವಿಸ್ತರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಅವಧಿಯಲ್ಲಿ ಜನ ಗುಂಪು ಸೇರುವುದು, ಸಂತೆ, ಜಾತ್ರೆ, ಕಾರ್ಯಗಳನ್ನು ನಡೆಸುವುದು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. ಎಲ್ಲ ವೈದ್ಯಕೀಯ ಸಿಬ್ಬಂದಿ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ADVERTISEMENT

‘ಕೊರೊನಾ ವೈರಸ್ ಬಗ್ಗೆ ನಿಗಾ ವಹಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈಗಾಗಲೇ ಸಂಪೂರ್ಣ ಮಾಹಿತಿ ಹಾಗೂ ತರಬೇತಿ ನೀಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜಿಲ್ಲೆಯ ಪ್ರತಿ ಮನೆಗೆ ಭೆೀಟಿ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಗೆ ವಿದೇಶಗಳಿಂದ ಬರುವವರ ಮಾಹಿತಿ ಕಲೆ ಹಾಕಿ, ಅಂತಹವರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿಟ್ಟು, ತಪಾಸಣೆಗೆ ಒಳಪಡಿಸಬೇಕು’ ಎಂದರು.

‘ಜಿಲ್ಲೆಗೆ ಫೆಬ್ರುವರಿಯಿಂದ ಶುಕ್ರವಾರದ ವರೆಗೆ ವಿದೇಶಗಳಿಂದ 125 ಜನರು ಬಂದಿದ್ದಾರೆ. ವಿದೇಶಗಳಿಂದ ಬಂದವರ ಮೇಲೆ ನಿರಂತರ ನಿಗಾ ಇಡಲಾಗಿದೆ. 89 ಮಂದಿಯನ್ನು ಗೃಹ ನಿರ್ಬಂಧನಕ್ಕೆ ಒಳಪಡಿಸಲಾಗಿದೆ. ಈ ಪೈಕಿ 89 ಜನರನ್ನು 14 ದಿನಗಳ ಗೃಹ ನಿರ್ಬಂಧನದಲ್ಲಿಟ್ಟು ತಪಾಸಣೆ ನಡೆಸಲಾಗುತ್ತಿದೆ. 25 ಮಂದಿ 14 ದಿನಗಳ ಗೃಹ ನಿರ್ಬಂಧನ ಪೂರ್ಣಗೊಳಿಸಿದ್ದಾರೆ’ ಎಂದು ತಿಳಿಸಿದರು.

‘ಒಂಬತ್ತು ಜನರು 28 ದಿನಗಳ ಗೃಹ ನಿರ್ಬಂಧನ ಪೂರ್ಣಗೊಳಿಸಿದ್ದಾರೆ. ಏಳು ಮಂದಿ ವಿದೇಶಗಳಿಗೆ ಹಿಂದಿರುಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ವದಂತಿಗಳಿಂದ ಭಯಪಡುವ ಅಗತ್ಯ ಇಲ್ಲ. ಮುಂಜಾಗ್ರತೆ ಪಾಲಿಸುವ ಮೂಲಕ ಮಾರಣಾಂತಿಕ ಸೋಂಕು ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಎಂ.ಯೋಗೇಶ್‌ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅನಿಲ್‌ ಕುಮಾರ್, ತಹಶೀಲ್ದಾರ್ ನಾಗಪ್ರಶಾಂತ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.