ಗೌರಿಬಿದನೂರು: ತಾಲ್ಲೂಕಿನ ಮಂಚೇನಹಳ್ಳಿಯ ಕೆರೆ ಕೋಡಿಯ ಬಳಿ ಶನಿವಾರ ಸಂಜೆ ಗ್ರಾ.ಪಂ ಆಯೋಜಿಸಿದ್ದ ರಸಸಂಜೆ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಮಂಚೇನಹಳ್ಳಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.
ಒಂದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿ ಬಿಜೆಪಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಗ್ರಾ.ಪಂ ಸದಸ್ಯ ಎಂ.ಆರ್.ಲಕ್ಷ್ಮಿನಾರಾಯಣ್ ಮಾತನಾಡಿ, ಗ್ರಾಮ ಪಂಚಾಯಿತಿಯಿಂದ ರಸಮಂಜರಿ ಕಾರ್ಯಕ್ರಮವನ್ನು ಕೆರೆ ಕೋಡಿಯಲ್ಲಿ ಆಯೋಜಿಸಲಾಗಿತ್ತು. ನಾಗರಿಕರಿಗೆ ಮನರಂಜನೆಯ ಜತೆಗೆ ನೈಸರ್ಗಿಕ ಸಂಪತ್ತಿನ ಬಗ್ಗೆ ತಿಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಈ ಕಾರ್ಯಕ್ರಮವನ್ನು ನಡೆಸದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದಾರೆ ಎಂದು ದೂರಿದರು.
ಸಾರ್ವಜನಿಕ ಕಾರ್ಯಕ್ರಮಕ್ಕೆ ರಾಜಕೀಯ ಬೆರೆಸುವುದು ಸರಿಯಲ್ಲ. ಚುನಾವಣೆ ಸಂದರ್ಭದಲ್ಲಿ ಮಾಡಬೇಕಾದ ರಾಜಕಾರಣವನ್ನು ಎಲ್ಲ ಸಂದರ್ಭದಲ್ಲಿ ಮಾಡುವುದು ನಾಯಕರ ಲಕ್ಷಣವಲ್ಲ. ಅಧಿಕಾರಿಗಳು ಅವರ ಕೈಗೊಂಬೆಗಳಾಗಿ ವರ್ತಿಸುವುದು ಸರಿಯಲ್ಲ. ಸಾರ್ವಜನಿಕ ಕಾರ್ಯಕ್ರಮಕ್ಕೆ ಈ ರೀತಿ ತೊಂದರೆ ಮಾಡುವುದು ಹೇಡಿತನ ಎಂದು ಹೇಳಿದರು.
ಜಿ.ಪಂ ಮಾಜಿ ಸದಸ್ಯ ಪಿ.ಎನ್.ಪ್ರಕಾಶ್ ಮಾತನಾಡಿ, ಆರೋಗ್ಯ ಸಚಿವರು ಅಯೋಗ್ಯರಂತೆ ವರ್ತಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ತಮ್ಮ ಕಾರ್ಯವೈಖರಿಯನ್ನು ಸಚಿವರು ಪ್ರದರ್ಶಿಸಬೇಕು. ಸಚಿವರು ಸಾರ್ವಜನಿಕ ಕಾರ್ಯಕ್ರಮಗಳಿಗೆ ತೊಂದರೆ ಮಾಡುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಈ ಭಾಗದ ಜನರು ಇದಕ್ಕೆ ಪ್ರತ್ಯುತ್ತರ ನೀಡಲಿದ್ದಾರೆ ಎಂದು ಹೇಳಿದರು.
ಸ್ಥಳಕ್ಕೆ ತಹಶೀಲ್ದಾರ್ ಎಚ್.ಶ್ರೀನಿವಾಸ್ ಹಾಗೂ ಎಸ್.ಡಿ.ಶಶಿಧರ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.