ADVERTISEMENT

ಪೆರೇಸಂದ್ರ: ಉಚಿತ ವೈದ್ಯಕೀಯ ಶಿಬಿರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 12:04 IST
Last Updated 18 ಸೆಪ್ಟೆಂಬರ್ 2019, 12:04 IST
ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿದ ಜನರು
ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿದ ಜನರು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೆರೇಸಂದ್ರದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ (ಸೇವಾ ದಿವಸ) ಅಂಗವಾಗಿ ಬಿಜೆಪಿ, ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂದೀಪ್ ರೆಡ್ಡಿ, ‘ನಾವು ಹಿಂದೆಂದಿಗಿಂತಲೂ ಉತ್ತಮ ಪ್ರಧಾನಿಯನ್ನು ಪಡೆದಿದ್ದೇವೆ. ಅವರ ಜನ್ಮದಿನವನ್ನು ಜನಸೇವೆಯೇ ಜನಾರ್ಧನನ ಸೇವೆ ಎಂಬಂತೆ ಸೇವಾ ದಿವಸವನ್ನಾಗಿ ಆಚರಿಸುತ್ತಿದ್ದೇವೆ’ ಎಂದು ಹೇಳಿದರು.

‘ಇಂದಿನ ದಿನಗಳಲ್ಲಿ ಆರೋಗ್ಯವೇ ಮಹಾಭಾಗ್ಯ ಎನ್ನುವಂತಾಗಿದೆ. ಬಡರೋಗಿಗಳು ಉತ್ತಮ ಚಿಕಿತ್ಸೆಯನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಇದನ್ನು ಅರಿತು ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸಿದೆ. ಇದರಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರು ವಾರ್ಷಿಕ ₹5 ಲಕ್ಷದಷ್ಟು ಉಚಿತ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ’ ಎಂದು ತಿಳಿಸಿದರು.

ADVERTISEMENT

‘ಜತೆಗೆ ಕೃಷಿ ಸಮ್ಮಾನ್, ಭಿಮಾ ಫಸಲ್, ಉಜ್ವಲ, ಮುದ್ರಾ, ಸುಕನ್ಯಾ ಸಮೃದ್ಧಿ, ಸ್ಕಿಲ್ ಇಂಡಿಯಾದಂತಹ ಜನಪರ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಜನಸಾಮಾನ್ಯರು, ವಿಶೇಷವಾಗಿ ಬಡಜನರು ಈ ಯೋಜನೆಗಳ ಪ್ರಯೋಜನ ಪಡೆಯಬೇಕು’ ಎಂದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಎ.ರಾಮಿರೆಡ್ಡಿ, ಎಸ್.ಸಿ. ಮೋರ್ಚಾ ಘಟಕದ ಉಪಾಧ್ಯಕ್ಷ ವಿಜಯ್ ಕುಮಾರ್, ಹಿಂದೂ ಸೇವಾ ಪ್ರತಿಷ್ಠಾನದ ಶ್ರೀಧರ್ ಸಾಗರ್, ಮುಖಂಡರಾದ ಪ್ರೇಮಲೀಲಾ ವೆಂಕಟೇಶ್, ಮಲ್ಲಿಕಾ, ಪುಷ್ಪಾ, ಮಂಡಿಕಲ್ಲು ಎಂ.ಕೆ.ಶ್ರೀಧರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.