ಚಿಂತಾಮಣಿ: ‘ಸಹಕಾರ ಸಂಘಗಳಲ್ಲಿ ರಾಜಕೀಯ ಮಾಡಬಾರದು. ಅಭಿವೃದ್ಧಿ ಕಡೆಗೆ ಗಮನಹರಿಸಬೇಕು’ ಎಂದುಶಾಸಕ ವಿ. ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಮಿಟ್ಟಹಳ್ಳಿಯಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಹಮ್ಮಿಕೊಂಡಿದ್ದ ಶೂನ್ಯ ಬಡ್ಡಿ ದರದಡಿ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಆರ್ಥಿಕ ಸಂಕಷ್ಟದಿಂದ ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆಯಾಗಿದೆ. ಹಾಗಾಗಿ, ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ. ಕ್ಷೇತ್ರದಲ್ಲಿ ನಾನು ನೀಡಿರುವ ಭರವಸೆ ಈಡೇರಿಸಲು ಬದ್ಧ’ ಎಂದರು.
‘ಮಹಿಳೆಯರು ಬಡ್ಡಿ ಮಾಫಿಯಾದಿಂದ ಹೊರಬಂದು ಬಡತನ ಮುಕ್ತ ಸದೃಢ ಹಾಗೂ ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಸದುದ್ದೇಶದಿಂದ ಡಿಸಿಸಿ ಬ್ಯಾಂಕಿನಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ’ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.
ಕಾರ್ಯಕ್ರಮದಲ್ಲಿ 41 ಸ್ತ್ರೀಶಕ್ತಿ ಸಂಘಗಳಿಗೆ ₹ 2.05 ಕೋಟಿ ಸಾಲ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್ ಮಾತನಾಡಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ನಾಗರಾಜ್, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಿಟ್ಟಹಳ್ಳಿ ಮಂಜುನಾಥ್, ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಧ್ಯಕ್ಷ ಸುಬ್ರಮಣಿ, ಕೆಂಚಾರ್ಲಹಳ್ಳಿ ಭಾಸ್ಕರ್, ಅನಪಲ್ಲಿ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ, ಮಂಜುನಾಥ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.