ಗೌರಿಬಿದನೂರು: ತಾಲ್ಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜತೆಗೆ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.
ನಗರದ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ಶೈಕ್ಷಣಿಕ ಪ್ರಗತಿ, ಪರಿಸರ ಸಂರಕ್ಷಣೆ, ತ್ಯಾಜ್ಯ ಸಂಸ್ಕರಣೆ, ವಿದ್ಯುತ್ ಪೂರೈಕೆ, ರಸ್ತೆ ಅಭಿವೃದ್ಧಿ, ಕೃಷಿ ಚಟುವಟಿಕೆ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು. ಪ್ರತಿ ಇಲಾಖೆಯಲ್ಲಿನ ಅಧಿಕಾರಿಗಳು ತಮ್ಮ ಕಾರ್ಯಕ್ಷಮತೆ ಹಾಗೂ ಬದ್ಧತೆಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
ಪ್ರತೀ ಮೊದಲನೇ ಶನಿವಾರ ಹಾಗೂ ಮೂರನೇ ಶನಿವಾರ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಗರದ ತಾ.ಪಂ ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆಎಂದರು.
ತಹಶೀಲ್ದಾರ್ ಎಚ್.ಶ್ರೀನಿವಾಸ್ ಮಾತನಾಡಿ, ಆಹಾರ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಂದ ಹಣ ಪಡೆದು ಆಹಾರ ಧಾನ್ಯ ನೀಡುತ್ತಿರುವ ಬಗ್ಗೆ ದೂರು ಬಂದಿದೆ. ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಕ್ರಮಕೈಗೊಳ್ಳಲಾಗುವುದುಎಂದರು.
ತಾ.ಪಂ. ಇಒ ಎನ್.ಮುನಿರಾಜು ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 51 ಸಾವಿರ ಕುಟುಂಬಗಳು ನರೇಗಾ ಅಡಿಯಲ್ಲಿ ಕೂಲಿ ಮಾಡಲು ನೋಂದಾಯಿಸಿಕೊಂಡಿದೆ. ಇದುವರೆಗೆ 32 ಸಾವಿರ ಕುಟುಂಬಗಳಿಗೆ ಉದ್ಯೋಗದ ಅವಕಾಶ ನೀಡಲಾಗಿದೆ. ಗೋಕುಂಟೆ, ಕಲ್ಯಾಣಿ, ಚೆಕ್ ಡ್ಯಾಂ ಸೇರಿದಂತೆ ಇನ್ನಿತರ ಕಾಮಗಾರಿಗಳು ನಡೆದಿವೆ ಎಂದರು.
ತಾ.ಪಂ ಆಡಳಿತಾಧಿಕಾರಿ ಅತಿಖುಲ್ಲಾ ಶರೀಪ್, ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ, ಸಮಾಜ ಕಲ್ಯಾಣ ಅಧಿಕಾರಿ ಮಹದೇವಸ್ವಾಮಿ, ನಗರಸಭೆ ಆಯುಕ್ತ ಸತ್ಯನಾರಾಯಣ, ಶ್ರೀಧರ್ ರೆಡ್ಡಿ, ಕೊಂಡಪ್ಪ, ಬಿ.ಜಿ.ಗೋವಿಂದರಾಜು, ಶಪೀಕ್, ನಟರಾಜ್, ವಿಶಾಲಾಕ್ಷಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.