ಚಿಕ್ಕಬಳ್ಳಾಪುರ: ‘ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ’ದ (ಆರ್ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದ ನೀತಿ ವಿರೋಧಿಸಿ ನ.4 ರಂದು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕ ಉಪಾಧ್ಯಕ್ಷ ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾಲು, ಕಾಫಿಪುಡಿ, ಚಹಾಪುಡಿ, ಗೋಡಂಬಿ, ಏಲಕ್ಕಿ ಬಾಳೆಹಣ್ಣು ಸೇರಿದಂತೆ ಸುಮಾರು 17 ಪದಾರ್ಥಗಳು ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ಅಡಿ ಬರಲಿವೆ. ಇದರಿಂದ ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಉಂಟಾಗಿ, ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದು ಹೇಳಿದರು.
‘ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ನೀತಿಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗದೇ ಈ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರದ ರೈತ ವಿರೊಧಿ ನೀತಿಯನ್ನು ಖಂಡಿಸಲಾಗುತ್ತದೆ. ಈ ಒಪ್ಪಂದದಿಂದ ಹೈನುಗಾರಿಕೆಗೆ ದೊಡ್ಡ ಹೊಡೆತ ಬೀಳುತ್ತದೆ. ಇದರಿಂದ ಸಣ್ಣ ರೈತರು ಸಂಪೂರ್ಣವಾಗಿ ನಾಶವಾಗುತ್ತಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಒಪ್ಪಂದಕ್ಕೆ ಸಹಿ ಹಾಕಬಾರದು’ ಎಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕ ಸದಸ್ಯರಾದ ಮಂಜುನಾಥ ರೆಡ್ಡಿ, ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಘಟಕ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಕಾರ್ಯದರ್ಶಿ ಚನ್ನರಾಯಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.