ADVERTISEMENT

ಚಿಕ್ಕಬಳ್ಳಾಪುರ | ಭವಿಷ್ಯನಿಧಿ ಪಾವತಿ; ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 6:28 IST
Last Updated 28 ಜನವರಿ 2023, 6:28 IST
ಎನ್.ಎಂ.ನಾಗರಾಜ್
ಎನ್.ಎಂ.ನಾಗರಾಜ್   

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಭವಿಷ್ಯ ನಿಧಿ ಷೇರುದಾರರಿಗೆ ಭವಿಷ್ಯ ನಿಧಿ ಹಾಗೂ ಇನ್ನಿತರ ಸೌಲಭ್ಯಗಳು ಸರಿಯಾದ ಸಮಯಕ್ಕೆ ಪಾವತಿ ಆಗಬೇಕು. ಇಲ್ಲದಿದ್ದರೆ ಇದರ ಸಂಪೂರ್ಣ ಜವಾಬ್ದಾರಿ ಇಲಾಖೆಯ ಅಧಿಕಾರಿ ಮತ್ತು ಏಜೆನ್ಸಿಯ‌ದ್ದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಎಚ್ಚರಿಸಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ ಮತ್ತು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಪ್ರಾದೇಶಿಕ ಕಚೇರಿಯು ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಕೆಲವು ಇಲಾಖೆಗಳಲ್ಲಿ ಚಾಲಕರಾಗಿ, ಬೆರಳಚ್ಚುಗಾರರಾಗಿ, ಸ್ವಚ್ಛತೆಗಾರರಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರಿಗೆ ನೀಡುತ್ತಿರುವ ವೇತನದಲ್ಲಿ ಭವಿಷ್ಯ ನಿಧಿಯ ಮೊತ್ತವನ್ನು ಕಟಾಯಿಸಿ ಅವರಿಗೆ ಸೌಲಭ್ಯಗಳನ್ನು ಕೊಡದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಕಾರ್ಮಿಕರ ಕಾಯ್ದೆಯಡಿ ಅವಕಾಶವಿದೆ. ಅಂತಹ ಪರಿಸ್ಥಿತಿ ತಂದುಕೊಳ್ಳಬೇಡಿ ಎಂದು ತಿಳಿಸಿದರು.

ADVERTISEMENT

ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಹರ್ಷವರ್ಧನ್ ಶ್ರೀವಾತ್ಸವನ್, ಉದ್ಯೋಗಿಗಳ ಕುಂದುಕೊರತೆಗಳು, ನಾಮನಿರ್ದೇಶನ, ಪಿಂಚಣಿ, ವಿವಿಧ ಪ್ರಮಾಣಪತ್ರಗಳು ಹಾಗೂ ಪ್ರಧಾನ ಉದ್ಯೋಗದಾತ ಪೋರ್ಟಲ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಆಯೋಜಕ ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಕಾಶ್, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.