ಶಿಡ್ಲಘಟ್ಟ: ‘ಇನ್ನೇನು ಕೆಲವೇ ತಿಂಗಳುಗಳಲ್ಲಿ ನಮ್ಮ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬರಲಿದೆ. ಅದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಕೊಳವೆಬಾವಿಗಳಲ್ಲಿಯೂ ನೀರು ತುಂಬಲಿದ್ದು, ರೈತರಿಗೆ ವರದಾನವಾಗಲಿದೆ’ ಎಂದು ಶಾಸಕ ವಿ. ಮುನಿಯಪ್ಪ ತಿಳಿಸಿದರು.
ಶಿಡ್ಲಘಟ್ಟದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್ -ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ. ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.
ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟಾರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡರೈತರನ್ನು ಗುರುತಿಸಿ ಸರ್ಕಾರ ಪ್ರತಿವರ್ಷ ಫಲಾನುಭವಿ ರೈತರಿಗೆ ಉಚಿತವಾಗಿ ಪಂಪ್, ಮೋಟಾರ್, ಪೈಪ್ ಮತ್ತು ಕೇಬಲ್ಗಳನ್ನು ನೀಡುತ್ತಿದೆ. ಈ ಬಾರಿಯೂ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಉಚಿತ ಪಂಪ್ಸೆಟ್ ಹಾಗೂ ಪರಿಕರಗಳನ್ನು ನೀಡುತ್ತಿದ್ದು, ರೈತರು ಸದುಪಯೋಗಪಡಿಸಿ ಕೊಳ್ಳುವಂತೆ ಹೇಳಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.