ಚಿಕ್ಕಬಳ್ಳಾಪುರ: 'ತಾಲ್ಲೂಕಿನಲ್ಲಿ ಹಲವು ಕಡೆ ಮಳೆಯಾಗುತ್ತಿರುವ ಕಾರಣ ಕೋವಿಡ್-19 ಜತೆಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಳ್ಳಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್-19 ನಿಯಂತ್ರಿಸುವ ಜತೆಗೆ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವಿಕೆ ತಡೆ ಕುರಿತು ಅರಿವು ಮೂಡಿಸಬೇಕು. ಗಾಂಧಿ ಜಯಂತಿಯಂದು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಶ್ರಮದಾನ ಮಾಡಬೇಕು’ ಎಂದು ತಿಳಿಸಿದರು.
‘ಈಗಾಗಲೇ ತಾಲ್ಲೂಕಿನ 12 ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ಥಳ ಗುರುತಿಸಿ ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ನಿಗಧಿತ ಅವಧಿ ಒಳಗೆ ಸ್ಥಳವನ್ನು ಗುರುತಿಸಿ ಕಾಮಗಾರಿ ಪ್ರಾರಂಭ ಮಾಡಬೇಕು’ ಎಂದರು.
‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸವನ್ನು ಒಂದು ಕಡೆ ಶೇಖರಣೆ ಮಾಡಿ, ಒಣ ಮತ್ತು ಹಸಿ ಕಸವನ್ನು ವಿಂಗಡಣೆ ಮಾಡುವ ಮೂಲಕ ಸಾರ್ವಜನಿಕರಿಗೆ ಕಸ ವಿಂಗಡಣೆ ಬಗ್ಗೆ ಅರಿವು ಮೂಡಿಸಬೇಕು. ಘನ ತ್ಯಾಜ್ಯ ವಿಲೇವಾರಿ ಘಟಕ, ಸಮುದಾಯ ಶೌಚಾಲಯಗಳು, ನರೇಗಾ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.