ಗೌರಿಬಿದನೂರು: ತಾಲ್ಲೂಕಿನ ದೇವಗಾನಹಳ್ಳಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿವಾದದ ಹಿನ್ನೆಲೆ ದಾಯಾದಿಗಳ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವಗಾನಹಳ್ಳಿ ಗ್ರಾಮದಲ್ಲಿ ಅಶ್ವತ್ಥರೆಡ್ಡಿ, ಹನುಮಂತ ರೆಡ್ಡಿ, ನಾರಾಯಣ ರೆಡ್ಡಿ, ಸುನೀಲ ಎಂಬುವರ ಮಧ್ಯೆ ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ಸುಮಾರು ವರ್ಷಗಳಿಂದ ಗಲಾಟೆ ನಡೆಯುತ್ತಿತ್ತು. ಸಾಕಷ್ಟು ಬಾರಿ ಪೊಲೀಸ್ ಠಾಣೆಗಳಲ್ಲಿ ರಾಜಿ ನಡೆದಿತ್ತು. ಆದರೆ ಬುಧವಾರ ಬೆಳಗ್ಗೆ ಸುಮಾರು 8 ಗಂಟೆಗೆ ಸಾವಿತ್ರಮ್ಮ ಎಂಬುವವರ ಜಾಗದಲ್ಲಿ ಹುಣಸೆ ಮರದ ವಿಚಾರಕ್ಕಾಗಿ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ದೊಣ್ಣೆ ಮತ್ತು ಮಚ್ಚಿನಿಂದ ಮೂವರೂ ಅಕ್ಕ-ತಂಗಿಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಮಚ್ಚು ಏಟಿನಿಂದ ಸಾವಿತ್ರಮ್ಮರವರಿಗೆ ತೀವ್ರ ಗಾಯವಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶ್ವತ್ಥರೆಡ್ಡಿ, ಹನುಮಂತ ರೆಡ್ಡಿ, ನಾರಾಯಣ ರೆಡ್ಡಿ, ಸುನೀಲ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.