ADVERTISEMENT

ಬೆಂಬಲ ಬೆಲೆ; ರಾಗಿ, ಭತ್ತ, ಬಿಳಿಜೋಳ ಖರೀದಿ

ತಾಲ್ಲೂಕುಗಳ ಎ.ಪಿ.ಎಂ.ಸಿ ಕೇಂದ್ರಗಳಲ್ಲಿ ನೋಂದಣಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 3:14 IST
Last Updated 14 ಅಕ್ಟೋಬರ್ 2025, 3:14 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಸಿರಿಧಾನ್ಯ, ಭತ್ತ ಮತ್ತು ಬಿಳಿಜೋಳ ಖರೀದಿ ಕುರಿತ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು
ಚಿಕ್ಕಬಳ್ಳಾಪುರದಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಸಿರಿಧಾನ್ಯ, ಭತ್ತ ಮತ್ತು ಬಿಳಿಜೋಳ ಖರೀದಿ ಕುರಿತ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು   

ಚಿಕ್ಕಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಸಿರಿಧಾನ್ಯ ಮತ್ತು ಬಿಳಿಜೋಳ ಮಾರಾಟಕ್ಕೆ ಇಚ್ಚಿಸುವ ರೈತರ ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಆಸಕ್ತ ರೈತರು ತಾಲ್ಲೂಕು ಕೇಂದ್ರಗಳಲ್ಲಿ ತೆರೆದಿರುವ ನೋಂದಣಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮನವಿ ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿಗ ಕಚೇರಿಯಲ್ಲಿ ಸೋಮವಾರ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಸಿರಿಧಾನ್ಯ, ಭತ್ತ ಮತ್ತು ಬಿಳಿಜೋಳ ಖರೀದಿ ಕುರಿತ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 97,869 ಕ್ವಿಂಟಲ್ ರಾಗಿಯನ್ನು ಖರೀದಿಸಿ ₹ 41.82 ಕೋಟಿಯನ್ನು 6,497 ರೈತರ ಖಾತೆಗಳಿಗೆ ಪಾವತಿಸಲಾಗಿದೆ ಎಂದು  ತಿಳಿಸಿದರು.

ADVERTISEMENT

ಜಿಲ್ಲೆಯ ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ರಾಗಿ, ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಲ್ ಸಿರಿಧಾನ್ಯ (ಸಾಮೆ ಮತ್ತು ನವಣೆ), ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಲ್ ಭತ್ತ ಮತ್ತು ಪ್ರತಿ ಎಕರೆಗೆ 15 ಕ್ವಿಂಟಲ್‌ನಂತೆ ಗರಿಷ್ಠ 150 ಕ್ವಿಂಟಲ್ ಜೋಳವನ್ನು ಖರೀದಿಸಲು ಮಿತಿ ನಿಗಧಿಪಡಿಸಲಾಗಿದೆ. ಈ ಮಿತಿಯಲ್ಲಿ ರೈತರು ಮಾರಾಟ ಮಾಡಬಹುದು ಎಂದರು.

ಎಲ್ಲ ತಾಲ್ಲೂಕುಗಳ ಎ.ಪಿ.ಎಂ.ಸಿ ಕೇಂದ್ರಗಳಲ್ಲಿ ಈಗಾಗಲೇ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಿದೆ. ಡಿಸೆಂಬರ್ 12ರವರೆಗೆ ನೊಂದಣಿ ಮಾಡಿಸಲು ಅವಕಾಶವಿದೆ. ಜಿಲ್ಲೆಯ ಅರ್ಹ ರೈತರು ಅಗತ್ಯ ದಾಖಲೆಗಳ ಜೊತೆ (ಆಧಾರ್ ಕಾರ್ಡ್, ಫ್ರೂಟ್ ಐಡಿ ಮತ್ತು ಇತರ) ಸಂಬಂಧಪಟ್ಟ ತಾಲ್ಲೂಕಿನ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದರು. 

2026ರ ಜ.1ರಿಂದ ಮಾ.31ರವರೆಗೆ ಖರೀದಿ ಪ್ರಕ್ರಿಯೆ ನಿರ್ವಹಿಸಲಾಗುತ್ತದೆ ಎಂದು ತಿಳಿಸಿದರು.

ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು 9108221416, ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ), ಚಿಕ್ಕಬಳ್ಳಾಪುರ ಕಚೇರಿಗೆ ಭೇಟಿ ನೀಡಲು ಕೋರಿದೆ. ಕಚೇರಿ 08156-277108 ಸಂಪರ್ಕಿಸಬಹುದು ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಕೆಳಗಿನಮನಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಪ್ರಧಾನ ವ್ಯವಸ್ಥಾಪಕ ಪಿ.ಎನ್‌. ಮಂಜುನಾಥ್‌, ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.