ADVERTISEMENT

ಸಮ್ಮೇಳನದ ಲಾಂಛನ ಬಿಡುಗಡೆ: ಅಗತ್ಯ ಸಿದ್ಧತೆಗೆ ಸುಧಾಕರ್ ಸೂಚನೆ

ಜಿಲ್ಲಾ ಕೇಂದ್ರದಲ್ಲಿ ಫೆ. 27ರಂದು ಆರಂಭ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 4:09 IST
Last Updated 14 ಫೆಬ್ರುವರಿ 2021, 4:09 IST
ಸಚಿವ ಡಾ.ಕೆ. ಸುಧಾಕರ್ ಅವರು ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದರು
ಸಚಿವ ಡಾ.ಕೆ. ಸುಧಾಕರ್ ಅವರು ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದರು   

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಫೆ. 27 ಮತ್ತು 28ರಂದು ನಡೆಯಲಿರುವ ಎಂಟನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಶನಿವಾರ ಬಿಡುಗಡೆಗೊಳಿಸಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಸಚಿವರು ಸಮ್ಮೇಳನಕ್ಕೆ ಶುಭ ಕೋರಿದರು.

‘ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾಡು, ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಬೇಕು’ ಎಂದು ಕಸಾಪ ಪದಾಧಿಕಾರಿಗಳಿಗೆ ಸಚಿವರು ಸೂಚಿಸಿದರು.

ADVERTISEMENT

ಈ ವೇಳೆ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ ಶ್ರೀನಿವಾಸ್ ಮಾತನಾಡಿ, ‘ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಮ್ಮೇಳನ ನಡೆಸಲಾಗುವುದು. ಸಮ್ಮೇಳನದ ಆಹ್ವಾನ ಪತ್ರಿಕೆ ಮದ್ರಣಕ್ಕೆ ಹೋಗುವ ಹಂತದಲ್ಲಿದ್ದು ಕೋವಿಡ್ ಮಾರ್ಗಸೂಚಿ ಅನ್ವಯ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು’ ಎಂದು ಹೇಳಿದರು.

‘ವಿಶೇಷವಾಗಿ ಜಿಲ್ಲೆಯ ನೆಲ, ಜಲ, ಪರಿಸರಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಕನ್ನಡದ ಸ್ಥಿತಿಗತಿಗಳ ಬಗ್ಗೆ ಹಾಗೂ ಶೈಕ್ಷಣಿಕ ಸಮಸ್ಯೆ, ಸವಾಲುಗಳ ಬಗ್ಗೆಯು ನುರಿತ ತಜ್ಞರಿಂದ ಸಮ್ಮೇಳನದಲ್ಲಿ ಚರ್ಚೆ, ಕಸಂವಾದ, ಕವಿಗೋಷ್ಠಿ ಹಾಗೂ ವಿಚಾರ ಸಂಕಿರಣ ಆಯೋಜಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು’ ಎಂದರು.‌

ರಾಜ್ಯ ಮಾವು ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್, ನಗರಸಭಾ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡರಾದ ಕೆ.ವಿ. ನವೀನ್‌ ಕಿರಣ್, ಮರಳುಕುಂಟೆ ಕೃಷ್ಣಮೂರ್ತಿ, ಕಸಾಪ ಪದಾಧಿಕಾರಿಗಳಾದ ನಂಜುಂಡಪ್ಪ, ರವಿಂದ್ರನಾಥ್, ತ್ಯಾಗರಾಜ್, ಉಷಾ ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.