ADVERTISEMENT

ಸೇವಾ ಭದ್ರತೆಗೆ ಆಗ್ರಹ

ನ. 11ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:31 IST
Last Updated 8 ನವೆಂಬರ್ 2020, 3:31 IST

ಬಾಗೇಪಲ್ಲಿ: ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರ ಸೇವಾ ಭದ್ರತೆಗೆ ಆಗ್ರಹಿಸಿ ನ. 11ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮಾರ್ಚ್‌ನಿಂದ ನವೆಂಬರ್‌ವರೆಗಿನ ಬಾಕಿ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ವಿದ್ಯಾರ್ಥಿನಿಲಯಗಳ ಹಾಗೂ ವಸತಿಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ(ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಡಿ ಧರಣಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷ ಬಿ. ಆಂಜನೇಯರೆಡ್ಡಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ವಿದ್ಯಾರ್ಥಿನಿಲಯ ಮತ್ತು ವಸತಿಶಾಲೆಗಳಲ್ಲಿ 20 ವರ್ಷಗಳಿಂದ ಹೊರಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. 10 ವರ್ಷ ಮೇಲ್ಪಟ್ಟ ದಿನಗೂಲಿಗಳಾಗಿ ಕೆಲಸ ಮಾಡಿರುವ ನೌಕರರನ್ನು ಏಕಾಏಕಿ ಹೊರಗುತ್ತಿಗೆ ನೌಕರರಾಗಿ ಪರಿವರ್ತನೆ ಮಾಡಿರುವುದು ಖಂಡನೀಯ ಎಂದರು.

ADVERTISEMENT

ಸಂಘದ ಜಿಲ್ಲಾ ಕಾರ್ಯದರ್ಶಿ ಕೆ. ಮುನಿಯಪ್ಪ ಮಾತನಾಡಿ, ಹೊರಗುತ್ತಿಗೆ ನೌಕರರಿಗೆ ಆಹಾರಧಾನ್ಯ ವಿತರಿಸಬೇಕು. ಭವಿಷ್ಯ ನಿಧಿ ಹಣವನ್ನು ನೌಕರರ ಖಾತೆಗೆ ಜಮೆ ಮಾಡಿರುವ ಬಗ್ಗೆ ದಾಖಲೆಗಳಿಲ್ಲ. ಕೂಡಲೇ ಪಿಎಫ್ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ. ಮುಸ್ತಾಫ, ಪದಾಧಿಕಾರಿಗಳಾದ ನಾರಾಯಣನಾಯಕ್, ಶಿವಪ್ಪ, ಬಿ.ಎನ್. ವೆಂಕಟರವಣಪ್ಪ, ಶಿಡ್ಲಘಟ್ಟದ ಭಾಗ್ಯಮ್ಮ, ಕದಿರಪ್ಪ, ನವೀನ್, ಸುನಿತಮ್ಮ, ಗುಡಿಬಂಡೆಯ ವೈ.ಜಿ. ನರಸಿಂಹಪ್ಪ, ರಂಗಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.