ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿನೌಕರರಿಗೆ ಸಕಾಲದಲ್ಲಿ ವೇತನ ನೀಡುತ್ತಿಲ್ಲ.ಪ್ರತಿ ತಿಂಗಳು 5ನೇ ತಾರೀಕು ವೇತನ ನೀಡಬೇಕು ಎಂದು ಸರ್ಕಾರ ಹೇಳಿದೆ. ಆದರೆ, ಮೂರ್ನಾಲ್ಕು ತಿಂಗಳಾದರೂ ವೇತನ ನೀಡುವುದಿಲ್ಲ. ಸಿಬ್ಬಂದಿಗೆ ಸಕಾಲಕ್ಕೆ ವೇತನ ನೀಡಬೇಕು ಎಂದು ಚಿಕ್ಕಬಳ್ಳಾಪುರ ತಾಲ್ಲೂಕುಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಅಧ್ಯಕ್ಷ ರಾಮಕೃಷ್ಣ ಆಗ್ರಹಿಸಿದರು.
ನಗರ ಹೊರವಲಯದ ಚಿತ್ರಾವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಗ್ರಾಮ ಪಂಚಾಯಿತಿ ನೌಕರರ ಸಭೆಯಲ್ಲಿ ಅವರು ಮಾತನಾಡಿದರು.
ಪಂಚಾಯಿತಿ ನೌಕರರು ಹಲವು ಸಮಸ್ಯೆಗಳು ಇವೆ. ನೌಕರರು ಸೇವಾ ಭದ್ರತೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ರಕ್ಷಣೆ ಮತ್ತು ಪಿಂಚಣಿಯೂ ಇಲ್ಲ. ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಎಂದು ಕೋರಿದರೆ ನಿಮ್ಮನ್ನು ಕೆಲಸದಿಂದ ಕಿತ್ತು ಹಾಕುತ್ತೇವೆ ಎಂದು ಅಧಿಕಾರಿಗಳು ಬೆದರಿಸುತ್ತಾರೆ ಎಂದು ದೂರಿದರು.
ಗ್ರಾಮಗಳಲ್ಲಿ ಜನರಿಗೆ ಅಗತ್ಯ ಸೇವೆಗಳು ದೊರೆಯಲು ಮತ್ತು ಗ್ರಾಮೀಣ ಜನರು ನೆಮ್ಮದಿಯಾಗಿರಬೇಕು ಎಂದರೆ ಪಂಚಾಯಿತಿ ನೌಕರರ ಪಾತ್ರ ಪ್ರಮುಖವಾಗಿದೆ. ಇದನ್ನು ಮನಗಂಡು ನಮಗೆ ಸೌಲಭ್ಯಗಳನ್ನು ಕಲ್ಪಿಸಬೇಕು. ಬೇಡಿಕೆಗಳಿಗೆ ಸ್ಪಂದಿಸಬೇಕು
ಎಂದರು.
ಸಂಘದ ಉಪಾಧ್ಯಕ್ಷ ಮುನಿವೆಂಕಟಪ್ಪ, ಖಜಾಂಚಿ ವೆಂಕಟೇಶ್, ಪದಾಧಿಕಾರಿಗಳು ಹಾಗೂ ನೌಕರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.