ಗೌರಿಬಿದನೂರು: ಆಶಾ ಕಾರ್ಯಕರ್ತೆಯರು ಕೋವಿಡ್-19 ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಜೀವಕ್ಕೆ ಭದ್ರತೆ ಮತ್ತು ಜೀವನಾಂಶಕ್ಕಾಗಿ ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನು ಸೇರಿಸಿ ಮಾಸಿಕ ₹12 ಸಾವಿರ ನೀಡಬೇಕು ಎಂದು ಆಶಾ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಸರಸ್ವತಮ್ಮ ಆಗ್ರಹಿಸಿದರು.
ನಗರದ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆಶಾ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪತ್ತೆಗಾಗಿ ಸುಮಾರು 2 ಕೋಟಿ ಮನೆಗಳ ಬಳಿ ತೆರಳಿ ಸಮೀಕ್ಷೆ ನಡೆಸಿದ ಕೀರ್ತಿ ನಮ್ಮದಾಗಿದೆ. ಫೀವರ್ ಕ್ಲೀನಿಕ್ ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳಲ್ಲಿ ಕೆಲಸ ಉತ್ತಮವಾಗಿ ನಡೆಸಿ ಸೋಂಕು ತಡೆಯಲು ಎಲ್ಲ ವಿಧದಲ್ಲಿ ಸರ್ಕಾರಕ್ಕೆ ಸಹಕಾರ ಮಾಡುತ್ತಿದ್ದೇವೆ. ನಮ್ಮ ಸಂಕಷ್ಟಗಳನ್ನು ಸರ್ಕಾರ ಆಲಿಸಿ ನಮ್ಮ ಬೇಡಿಕೆಗಳು ಈಡೇರಿಸುವ ಮೂಲಕ ನಮ್ಮೆಲ್ಲರ ಬದುಕಿಗೆ ಭದ್ರತೆ ಒದಗಿಸಬೇಕು ಎಂದರು.
ಸಂಘದ ಕಾರ್ಯದರ್ಶಿ ಮಂಜುಳಾ ಮಾತನಾಡಿ, ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಅಗತ್ಯವಿರುವಷ್ಟು ಮಾಸ್ಕ್, ಗ್ಲೌಸ್, ಫೇಸ್ ಶೀಲ್ದ್ ಮತ್ತು ಸ್ಯಾನಿಟೈಜರ್ ಇತ್ಯಾದಿ ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಎಲ್ಲ ಕಾರ್ಯಕರ್ತರ ಆರೋಗ್ಯ ತಪಾಸಣೆ ಮಾಡಬೇಕು. ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ಮತ್ತು ಅವಧಿಯಲ್ಲಿ ಸಂಪೂರ್ಣ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರಾದ ಶೈಲಜ, ಲಕ್ಷ್ಮಿ, ಭಾಗ್ಯಮ್ಮ, ಸುಧಾ, ಗೀತ ಅಮರಾವತಿ, ಮಮತ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.