ADVERTISEMENT

ಗ್ರಾ.ಪಂ: ಆದಾಯಕ್ಕಿಂತ ಹೆಚ್ಚಿನ ವೆಚ್ಚ

ಶಿಡ್ಲಘಟ್ಟ ತಾಲ್ಲೂಕಿಗೆ ನಿವೃತ್ತ ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 2:50 IST
Last Updated 19 ಆಗಸ್ಟ್ 2021, 2:50 IST
ಶಿಡ್ಲಘಟ್ಟದ ನಗರಸಭೆಗೆ ಭೇಟಿ ನೀಡಿದ್ದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್ ಅವರು ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಗೌರಿಬಿದನೂರು ಹಾಗೂ ಚಿಂತಾಮಣಿ ನಗರಸಭೆಗಳಿಗೆ ಪ್ರಮಾಣ ಪತ್ರ ನೀಡಿದರು
ಶಿಡ್ಲಘಟ್ಟದ ನಗರಸಭೆಗೆ ಭೇಟಿ ನೀಡಿದ್ದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್ ಅವರು ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಗೌರಿಬಿದನೂರು ಹಾಗೂ ಚಿಂತಾಮಣಿ ನಗರಸಭೆಗಳಿಗೆ ಪ್ರಮಾಣ ಪತ್ರ ನೀಡಿದರು   

ಶಿಡ್ಲಘಟ್ಟ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆದಾಯಕ್ಕಿಂತಲೂ ಹೆಚ್ಚಿನ ವೆಚ್ಚ ಆಗಿರುವುದು ಕಂಡುಬಂದಿದೆ ಎಂದು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್
ತಿಳಿಸಿದರು.

ತಾಲ್ಲೂಕಿನ ಅಬ್ಲೂಡು ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರಸಭೆಗೆ ಭೇಟಿ ನೀಡಿ ಆಡಳಿತ ಸುಧಾರಣೆಯ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದು ಮಾತನಾಡಿದರು.

ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ₹6 ಲಕ್ಷ ಇದ್ದರೆ, ಆ ಗ್ರಾಮ ಪಂಚಾಯಿತಿಯ ವಿದ್ಯುತ್ ಬಿಲ್ ಬಾಕಿ ₹5 ಕೋಟಿಗಳಷ್ಟಿರುವುದು ಗಮನಕ್ಕೆ ಬಂದಿತು ಎಂದರು.

ADVERTISEMENT

ನಗರಸಭೆಯು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಲ್ಲಿ ಪೌರ ಕಾರ್ಮಿಕರ ಸಂಬಳದ ವಿಳಂಬ ಮತ್ತು ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಜಿಲ್ಲೆಯ ಎಲ್ಲ ನಗರಸಭೆಯ ಹಾಗೂ ಪುರಸಭಾ ಅಧಿಕಾರಿಗಳು ಆಗಮಿಸಿದ್ದು ಅವರ ಸಮಸ್ಯೆಯನ್ನು ಆಲಿಸಿ ಸೂಕ್ತವಾದ ಸಲಹೆ ಮತ್ತು ಪರಿಹಾರವನ್ನು ಸೂಚಿಸಿದ್ದಾಗಿ ಹೇಳಿದರು.

ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಶೀಘ್ರವಾಗಿ, ಯಾವುದೇ ವಿಳಂಬ ಅಥವಾ ತೊಂದರೆಯಿಲ್ಲದೆ ಸುಗಮವಾಗಿ ಸಿಗಬೇಕು. ಸಾರ್ವಜನಿಕ ಕುಂದುಕೊರತೆಗಳು ತ್ವರಿತವಾಗಿ ವಿಲೇವಾರಿ ಆಗಬೇಕು ಎನ್ನುವುದು ನಮ್ಮ ಆಶಯ ಎಂದರು.

ಉಪವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಬಿ.ಎಸ್. ರಾಜೀವ್, ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ್, ಉಪಾಧ್ಯಕ್ಷ ಅಫ್ಸರ್ ಪಾಷ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.