ADVERTISEMENT

ಸಂಧ್ಯಾಕಾಲದ ಜೀವನ ಶಿಸ್ತುಬದ್ಧವಾಗಿರಲಿ

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ 8ನೇ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2019, 11:36 IST
Last Updated 31 ಆಗಸ್ಟ್ 2019, 11:36 IST
ನಿವೃತ್ತ ಅಧಿಕಾರಿಗಳು, ಸಿಬ್ಬಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ನಿವೃತ್ತ ಅಧಿಕಾರಿಗಳು, ಸಿಬ್ಬಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.   

ಚಿಕ್ಕಬಳ್ಳಾಪುರ: ‘ಬದುಕಿನ ಉದ್ದಕ್ಕೂ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಅಧಿಕಾರಿಗಳು ನಿವೃತ್ತಿಯ ಬಳಿಕವು ಶಿಸ್ತುಬದ್ಧವಾಗಿ ಇತರರಿಗೆ ಮಾದರಿಯಾಗಿ ಜೀವನ ನಡೆಸಬೇಕು’ ಎಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಕರ್ನಿಂಗ್ ತಿಳಿಸಿದರು.


ನಗರದ ಪೊಲೀಸ್ ಕಾಲೋನಿ ಆವರಣದಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂಘದ 8ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


‘ನಿವೃತ್ತಿಯ ನಂತರ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು. ಈಗಾಗಲೇ ಬೆಂಗಳೂರಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಭವ್ಯವಾದ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಆ ಮೂಲಕ ಸಂಘದ ಚಟುವಟಿಕೆಗಳನ್ನು ನಿರ್ವಹಿಸಲಾಗುತ್ತಿದೆ. ಜತೆಗೆ ಸಮಾಜ ಸೇವಾ ಕಾರ್ಯದಲ್ಲಿ ಕೂಡ ಸಂಘ ತೊಡಗಿಸಿಕೊಂಡಿದೆ’ ಎಂದು ಹೇಳಿದರು.

ADVERTISEMENT


‘ರಾಜ್ಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿಗಾಗಿ ರಾಜ್ಯ ಸಂಘ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಇಡೀ ರಾಜ್ಯಾದ್ಯಂತ ಸಂಘವನ್ನು ಬಲಿಷ್ಟಗೊಳಿಸಿ ತಮ್ಮ ಹಕ್ಕುಗಳಿಗೆ ಹೋರಾಡುತ್ತಿದೆ. ನಿವೃತ್ತ ಪೊಲೀಸ್ ಅಧಿಕಾರಿಗಳ ಹಲವು ಬೇಡಿಕೆಗಳ ಈಡೇರಿಸುವ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ಚಿಕ್ಕಬಳ್ಳಾಪುರ ಸಂಘ ಉತ್ತಮವಾಗಿ ಸಂಘಟನೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಂಘದ ಅಭಿವೃದ್ಧಿ ಜತೆಗೆ ಸಮಾಜ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕು’ ಎಂದರು.


ನಿವೃತ್ತ ಎಸ್‌ಐ, ಎಎಸ್‌ಐ ಹಾಗೂ ಕಾನ್‌ಸ್ಟೆಬಲ್‌ಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮೃತ ನೌಕರರಿಗೆ ಸಂತಾಪ ಸೂಚಿಸಲಾಯಿತು. ಸಂಘದ 2017–18ನೇ ಸಾಲಿನ ವಾರ್ಷಿಕ ವರದಿ ಸಭೆಯಲ್ಲಿ ಮಂಡಿಸಲಾಯಿತು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು, ನಿವೃತ್ತ ಡಿವೈಎಸ್‍ಪಿ ನಾಣಯ್ಯ, ನಿವೃತ್ತ ಹಿರಿಯ ಅಧಿಕಾರಿಗಳಾದ ದೊಡ್ಡಯ್ಯ, ಶಿವಶಂಕರ್, ನಂಜುಂಡಪ್ಪ, ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಿವೃತ್ತ ಎಎಸ್‍ಐ ಯಲ್ಲಪ್ಪ, ಗೌರವಾಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ನರಸಿಂಹಮೂರ್ತಿ, ಖಜಾಂಚಿ ಎಸ್.ಎಂ.ಕೃಷ್ಣಮೂರ್ತಿ, ಉಪಾಧ್ಯಕ್ಷ ಕೆ.ಎ.ನಾಗರಾಜ್, ಸಹ ಕಾರ್ಯದರ್ಶಿ ಡಿ.ವೆಂಕಟರಾಯಪ್ಪ, ಕಾನೂನು ಸಲಹೆಗಾರರಾದ ಸಂಜೀವಪ್ಪ, ರಾಮಚಂದ್ರರಾವ್, ಲಕ್ಷ್ಮೀನಾರಾಯಣ್, ಶ್ರೀರಾಮಯ್ಯ, ನಾನಾಚಾರಿ, ಪ್ರತಾಪ್ ಕುಮಾರ್, ಕೃಷ್ಣಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.