ADVERTISEMENT

ಎಸ್.ಸಿ.ಪಿ ಆಯುಷ್ ಕಾರ್ಯಾಗಾರ| ಆರೋಗ್ಯವಂತ ಯುವಜನರಿಂದ ಸಮೃದ್ಧ ಸಮಾಜ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 14:40 IST
Last Updated 17 ಫೆಬ್ರುವರಿ 2020, 14:40 IST
ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಮಾತನಾಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಆರೋಗ್ಯವಂತ ಯುವಜನರಿಂದ ಮಾತ್ರ ಸಮೃದ್ಧ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಯುವಜನರು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಆರೋಗ್ಯ ಕಾಯ್ದುಕೊಳ್ಳುವತ್ತ ಗಮನಹರಿಸಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಹೇಳಿದರು.

‘ಮಾಹಿತಿ, ಶಿಕ್ಷಣ ಮತ್ತು ಸಂವಹನ ಯೋಜನೆ’ ಅಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಎಸ್.ಸಿ.ಪಿ ಆಯುಷ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರಸುತ್ತ ದಿನಗಳಲ್ಲಿ ಸುಸ್ಥಿರ ಸಮಾಜವನ್ನು ಕಟ್ಟಲು ಆರೋಗ್ಯವಂತ ಯುವಜನರು ಪಣತೊಡಬೇಕಿದೆ. ದುಶ್ಚಟಗಳಿಂದ ದೂರವಿದ್ದರೆ ಆರೋಗ್ಯಮಟ್ಟ ತನ್ನಿಂದ ತಾನೇ ಸುಧಾರಣೆ ಆಗುತ್ತದೆ. ವಿದ್ಯಾರ್ಥಿಗಳು ವಾತಾವರಣದಲ್ಲಿ ಬಹುಬೇಗನೆ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟು ದಿಸೆಯಲ್ಲಿ ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕಿದೆ. ಇಂತಹ ಚಟುವಟಿಕೆಗಳಿಂದಲೇ ನಾವು ಸಮೃದ್ಧ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಹಾಬುದ್ದೀನ್ ಮಾತನಾಡಿ, ‘ಆಧುನಿಕ ಜಗತ್ತಿನ ಒತ್ತಡದ ಜೀವನಶೈಲಿಯಿಂದ ಮನುಷ್ಯ ಬಹುಬೇಗನೆ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾನೆ. ದಿನನಿತ್ಯದ ಜೀವನ ಶೈಲಿಯನ್ನು ಬದಲಿಸಿಕೊಂಡು ಸಮತೋಲನ ಆಹಾರವನ್ನು ಸೇವಿಸಿ ಸದೃಢರಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಅಗತ್ಯವಿದೆ. ಈ ಕಾರ್ಯಕ್ರಮದ ಉಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಯೋಗ ಶಿಕ್ಷಣ ಮತ್ತು ಪತಂಜಲಿ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದರಾಜು, ಜಿಲ್ಲಾ ಆಯುಷ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.