
ಚಿಂತಾಮಣಿ: ನಗರದ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಕ್ರೀಡಾಂಗಾಣದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.
ಮೋಟಾರು ನಿರೀಕ್ಷಕ ದಾಸೇಗೌಡ ಮಾತನಾಡಿ, ‘ಅಪ್ರಾಪ್ತ ವಯಸ್ಸಿನವರು ವಾಹನಗಳನ್ನು ಚಾಲನೆ ಮಾಡಬಾರದು. 18 ವರ್ಷ ತುಂಬುವವರೆಗೆ ವಾಹನಗಳನ್ನು ಓಡಿಸುವುದು ಅಪರಾಧವಾಗಿದ್ದು, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತ ಕಡಿಮೆ ಮಾಡಲು ಇಂಥ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ವಾಹನ ತೆಗೆದುಕೊಂಡು ಹೋಗುವ ಸವಾರರು ಚಾಲನಾ ಪರವಾನಗಿ ಮತ್ತು ವಾಹನಗಳ ದಾಖಲೆಗಳನ್ನು ಹೊಂದಿರಬೇಕು ಎಂದು ಹೇಳಿದರು.
18 ವರ್ಷ ದಾಟಿದ ನಂತರ ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪಡೆದು ವಾಹನ ಓಡಿಸಬಹುದು. ಪರವಾನಗಿ ಇಲ್ಲದೆ ವಾಹನ ಓಡಿಸಿದರೆ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದರೆ ಅಪಘಾತ ಕಡಿಮೆ ಮಾಡಬಹುದು ಎಂದು ತಿಳಿಸಿದರು.
ದ್ವಿಚಕ್ರವಾಹನಗಳನ್ನು ಚಾಲನೆ ಮಾಡುವಾಗ ಹೆಲ್ಮೆಟ್, ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಬೇಕು. ವಾಹನಗಳ ಚಾಲನೆ ವೇಳೆ ಮೊಬೈಲ್ನಲ್ಲಿ ಮಾತನಾಡಬಾರದು. ಮಧ್ಯಪಾನ ಮಾಡಿ ವಾಹನ ಓಡಿಸಬಾರದು ಎಂದರು.
ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ವಿಜಿಕುಮಾರ್, ಸರ್ಕಾರಿ ಬಾಲಕರ ಪ್ರೌಢಶಾಲೆ ಮುಖ್ಯ ಶಿಕ್ಷಕ ಸುರೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.