ADVERTISEMENT

ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 6:13 IST
Last Updated 28 ಮಾರ್ಚ್ 2023, 6:13 IST

ಚಿಕ್ಕಬಳ್ಳಾಪುರ: ಪ್ರಸಿದ್ಧ ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು ಪ್ರವಾಸಿಗರ ಬಹುದಶಕಗಳ ಕನಸು ನನಸಾಗಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಖ್ಯಾತ ನಟ ಶಂಕರ್ ನಾಗ್ ಅವರು ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಿಸಬೇಕು ಎಂದು ಆಸೆಪಟ್ಟಿದ್ದರು. ಅವರ ಆಸೆ ಕೆಲವೇ ತಿಂಗಳಲ್ಲಿ ಈಡೇರಲಿದೆ ಎಂದರು.

ರೋಪ್ ವೇ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‌ ವೇ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಯೋಜನೆಗೆ ₹ 93.40 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಸುಮಾರು 2.93 ಕಿ.ಮೀ ದೂರದ ರೋಪ್‌ವೇ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

ADVERTISEMENT

ರೋಪ್‌ವೇ ನಿರ್ಮಾಣದಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ. ಬೆಟ್ಟದ ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್ ಸ್ಟೇಷನ್‌ಗಳಲ್ಲಿ ವಿವಿಧ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿ ಸಲಾಗುತ್ತದೆ. ಬೆಟ್ಟದ ಕೆಳಗಿನ ಟರ್ಮಿನಲ್ ನಲ್ಲಿ 480 ದ್ವಿಚಕ್ರ, 410 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಪುಡ್ ಕೋರ್ಟ್, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್ ಕೌಂಟರ್‌ಗಳು, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಟ್, ಮಳಿಗೆಗಳು ಇರುತ್ತವೆ ಎಂದರು.

ಈ ಯೋಜನೆಯಿಂದಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲಿದೆ. ದೇವನಹಳ್ಳಿ ಕೋಟೆ, ನಂದಿ, ಭೋಗನಂದೀಶ್ವರ, ಘಾಟಿ ಸುಬ್ರಹ್ಮಣ್ಯ, ವಿದುರಾಶ್ವತ್ಥ, ಮುದ್ದೇನಹಳ್ಳಿ ಮುಂತಾದ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.